ಉಡುಪಿ: ‘ಪ್ರಜಾಪ್ರಭುತ್ವದ ವ್ಯವಸ್ಥೆ ಯಲ್ಲಿ ಜನವಿರೋಧಿ ಸರ್ಕಾರವನ್ನು ಕಿತ್ತೆಸೆಯುವ ಮತ್ತು ಹೊಸ ಸರ್ಕಾರವನ್ನು ಸ್ಥಾಪಿಸುವ ಅವಕಾಶವನ್ನು ನಾಗರಿಕರಿಗೆ ನೀಡಿದೆ’ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ. ವೆಂಕಟೇಶ ನಾಯ್ಕ್ ಹೇಳಿದರು.
ಜಿಲ್ಲಾಡಳಿತ, ಚುನಾವಣಾ ಆಯೋಗ ಗುರುವಾರ ಆಯೋಜಿಸಿದ್ದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹ ತ್ತರವಾಗಿದೆ. ಜನತಂತ್ರದ ಮುಖ್ಯ ಅಂಗವೇ ಚುನಾವಣೆಗಳು. ಪ್ರಜೆಗಳಿಂದ ಆಯ್ಕೆ ಯಾದ ಸರ್ಕಾರ ಜನರ ಆಶೋತ್ತರಗಳಂತೆಯೇ ನಡೆಯಬೇಕು ಎಂಬುದು ಸಂವಿಧಾನದ ನಿಯಮ.ಪ್ರಜಾಪ್ರ ಭುತ್ವದ ವ್ಯವಸ್ಥೆಗೆ ಒಳಿತನ್ನು ಬಯಸುವ ಜನಪರ ನಾಯಕನನ್ನು ಆಯ್ಕೆ ಮಾಡವ ಜವಾಬ್ದಾರಿ ಮತದಾರರ ಕೈಯಲ್ಲಿದೆ ಇದೆ’ ಎಂದರು.
ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, ಮತ ದಾನದ ಪ್ರಾಮುಖ್ಯತೆ ಮತ್ತು ಪ್ರಜೆ ಗಳ ಮೇಲಿರುವ ಜವಾಬ್ದಾರಿಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಕಾಲೇಜು ಮಟ್ಟದಲ್ಲಿ ಮತದಾರ ಜಾಗೃತಿ ಸಂಘ ಸ್ಥಾಪಿಸಿ ನಿಮ್ಮ ಸುತ್ತಲಿನ ಜನರಿಗೆ ಮಾತದಾನದ ಮಹತ್ವ ಹಾಗೂ ಜಾಗೃತಿ ಅರಿವು ಮೂಡಿಸುವುದು ವಿದ್ಯಾರ್ಥಿಗಳ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶತಮಾನದ ಮತದಾರರಿಗೆ ಪ್ರಮಾಣ ಪತ್ರವನ್ನು ನೀಡಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಎಂಜಿಎಂ ಕಾಲೇಜಿನ ಪ್ರಾಂಶುಪಾಲೆ ಸಂಧ್ಯಾ ನಂಬಿಯಾರ್, ಕಾನೂನು ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಲತಾ, ಯುವ ಸಬಲೀಕರಣ ಇಲಾಖೆ ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮ ಣ ಬಿ. ನಿಂಬರಗಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಅನುರಾಧ ಸ್ವಾಗತಿಸಿದರು, ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ವಂದಿಸಿದರು.
**
ನಿರ್ಭಿತರಾಗಿ ಮತ ಚಲಾಯಿಸಿ
ಪ್ರಜಾಪ್ರಭುತ್ವದ ಘನತೆಯನ್ನು ಎತ್ತಿ ಹಿಡಿಯುವಲ್ಲಿ ಮತದಾರರ ಪಾತ್ರ ಪ್ರಮುಖವಾಗಿದೆ. ಯಾವುದೇ ಆಮಿಷಕ್ಕೆ ಒಳಗಾಗದೇ ನಿರ್ಭೀತರಾಗಿ ಮತ ಚಲಾಯಿಸುವುದರ ಮೂಲಕ ಪ್ರಜಾಪ್ರಭುತ್ವದ ನೈಜ ಅರ್ಥವನ್ನು ಸಾರ್ಥಕಗೊಳಿಸಿ. ನಿಮ್ಮನ್ನು ಆಳುವ ಪ್ರಭುವನ್ನು ಆಯ್ಕೆ ಮಾಡುವ ಜವಾಬ್ದಾರಿ ನಿಮ್ಮದು. ಚುನಾವಣೆಯಲ್ಲಿ ವಿಕಲಚೇತನರಲ್ಲಿ ಶೇ 100 ಮತದಾನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ವಿಶೇಷವಾದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದರು.