ಬ್ಯಾಡಗಿ: ‘ಬೇಡ ಜಂಗಮ ಸಮಾಜದವರಿಗೆ ಪರಿಶಿಷ್ಟ ಜಾತಿ (ಎಸ್.ಸಿ.) ಪ್ರಮಾಣ ಪತ್ರ ನೀಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದು ಖಂಡನೀಯ’ ಎಂದು ಬೇಡ ಜಂಗಮ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ.ಹಿರೇಮಠ ಹೇಳಿದರು.
ಪಟ್ಟಣದ ವಿದ್ಯಾನಗರದಲ್ಲಿ ಇತ್ತೀಚೆಗೆ ನಡೆದ ‘ಬೇಡ ಜಂಗಮ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಸಭೆ’ಯಲ್ಲಿ ಅವರು ಮಾತನಾಡಿದರು.
‘ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಸಮಾಜಕ್ಕೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ಸರ್ಕಾರವೇ ನಿರ್ದೇಶನ ನೀಡಿದೆ. ಆದರೆ, ಅಧಿಕಾರಿಗಳು ಮಾತ್ರ ಬೇಡ ಜಂಗಮ ಸಮಾಜದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ದೂರಿದರು.
‘ಈಗಾಗಲೆ ಹೋರಾಟಗಳನ್ನು ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅದನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಲಾಗಿದೆ’ ಎಂದರು.
ಅಖಿಲ ಕರ್ನಾಟಕ ಡಾ.ಅಂಬೇಡ್ಕರ್ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ಗಂಗಾಧರ ಹಿರೇಮಠ ಮಾತನಾಡಿದರು.
ಮುಖಂಡರಾದ ವಿ.ವಿ.ಹಿರೇಮಠ, ಕೆ.ಸಿ.ಸೊಪ್ಪಿನಠ, ರುದ್ರಯ್ಯ ಸಾಲಿಮಠ, ರಾಜಶೇಖರ ಹಾಲೇವಾಡಿಮಠ, ಶರಣಯ್ಯ ಬೂದಿಹಾಳಮಠ, ಗಂಗಾಧರಶರ್ಮಾ ಹಿರೇಮಠ, ಎಂ.ಎ.ಹಿರೇಮಠ, ಬಸವರಾಜಯ್ಯ ಹಿರೇಮಠ ಹಾಗೂ ಮೃತ್ಯುಂಜಯ ಹಿರೇಮಠ ಇದ್ದರು.