ಕೋಲಾರ: ‘ಮುಳಬಾಗಿಲು ಶಾಸಕ ಕೊತ್ತೂರು ಮಂಜುನಾಥ್ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ವಿಶೇಷ ಘಟಕ ಯೋಜನೆಯಡಿ (ಎಸ್ಸಿಪಿ) ಪ್ರತಿ ಗ್ರಾಮದಲ್ಲೂ ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸಿದ್ದಾರೆ’ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅರವಿಂದ್ ಹೇಳಿದರು.
ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಮುಡಿಯನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ರಿಷ್ಣಗಿರಿ ಗ್ರಾಮದಲ್ಲಿ ಗುರುವಾರ ₹ 5 ಲಕ್ಷ ಅಂದಾಜು ವೆಚ್ಚದ ಸಿಮೆಂಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಈಗಾಗಲೇ ಕ್ಷೇತ್ರದ ವ್ಯಾಪ್ತಿಯ ಬಹುತೇಕ ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಿಸಲಾಗಿದೆ. ಉಳಿದ ಗ್ರಾಮಗಳಲ್ಲೂ ಸದ್ಯದಲ್ಲೇ ರಸ್ತೆ ಕಾಮಗಾರಿ ಆರಂಭಿಸಲಾಗುತ್ತದೆ ಎಂದರು.
ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರದ ಅನುದಾನದ ಜತೆಗೆ ದಾನಿಗಳ ನೆರವು ಪಡೆಯಲಾಗುತ್ತದೆ. ವಿದ್ಯಾರ್ಥಿಗಳಿಗೆ ಶೌಚಾಲಯ, ನೂತನ ಕೊಠಡಿ, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗುವುದು. ಈಗಾಗಲೇ ಹನುಮನಹಳ್ಳಿ ಶಾಲೆಗೆ ದಾನಿಗಳ ನೆರವು ಪಡೆದು ₹ 7ಲಕ್ಷ ವೆಚ್ಚದಲ್ಲಿ ಶೌಚಾಲಯ ಮತ್ತು ಕೊಠಡಿಗಳನ್ನು ಕಟ್ಟಿಸಲಾಗಿದೆ ಎಂದು ಹೇಳಿದರು.
ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟದ ಬಗ್ಗೆ ಎಚ್ಚರಿಕೆ ವಹಿಸಬೇಕು. ಗುತ್ತಿಗೆದಾರರಿಂದ ಗುಣಮಟ್ಟದ ಕಾಮಗಾರಿ ಮಾಡಿಸಬೇಕು. ರಸ್ತೆ ಕಾಮಗಾರಿಯ ಗುಣಮಟ್ಟ ಕಳಪೆಯಾಗಿದ್ದರೆ ಆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
‘ಶಾಸಕ ಕೊತ್ತೂರು ಮಂಜುನಾಥ್ ಅವರು ಜನರ ಕಷ್ಟಕ್ಕೆ ಸ್ಪಂದಿಸುತ್ತಿದ್ದು, ಮಕ್ಕಳ ಶಿಕ್ಷಣ, ಬಡ ಹೆಣ್ಣು ಮಕ್ಕಳ ಮದುವೆ ಮತ್ತು ಚಿಕಿತ್ಸೆಗೆ ಹಣಕಾಸು ನೆರವು ನೀಡುತ್ತಿದ್ದಾರೆ’ ಎಂದು ಉತ್ತನೂರು ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥ್ ಹೇಳಿದರು.
ಎಪಿಎಂಸಿ ನಿರ್ದೇಶಕ ಆರ್.ಪೆದ್ದಪ್ಪಯ್ಯ, ಗ್ರಾಮಸ್ಥರಾದ ಬಾಬು, ಚನ್ನಪ್ಪ, ಸೋಮು, ಶಂಕರಪ್ಪ ಹಾಜರಿದ್ದರು.