ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದಗಂಗಾಮಠದ ಡಾ.ಶಿವಕುಮಾರ ಸ್ವಾಮೀಜಿ ಅವರಿಗೆ ವೈದ್ಯರು ಯಶಸ್ವಿಯಾಗಿ ಸ್ಟೆಂಟ್ ಅಳವಡಿಸಿದ್ದು ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಬಿಜಿಎಸ್ ಆಸ್ಪತ್ರೆ ವೈದ್ಯರು ಶುಕ್ರವಾರ ತಿಳಿಸಿದ್ದಾರೆ.
ಶೀತ, ಕಫ ದಿಂದ ಬಳಲುತ್ತಿದ್ದ ಶ್ರೀಗಳನ್ನು ಶುಕ್ರವಾರ ಬೆಳಗಿನ ಜಾವ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಸ್ವಾಮೀಜಿ ನ್ಯುಮೋನಿಯಾದಿಂದ ಬಳಲುತ್ತಿದ್ದು ಅವರ ಪಿತ್ತನಾಳದಲ್ಲಿದ್ದ ಬ್ಲಾಕೇಜ್ ತೆಗೆಯಲಾಗಿದೆ. ಕೇವಲ 15 ನಿಮಿಷಗಳಲ್ಲಿ ಸ್ಟೆಂಟ್ ಅಳವಡಿಕೆ ಮಾಡಲಾಗಿದ್ದು ಶ್ರೀಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಶ್ರೀಗಳು ಸಂಪೂರ್ಣವಾಗಿ ಗುಣಮುಖರಾದ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವೈದ್ಯ ಡಾ. ರವೀಂದ್ರ ತಿಳಿಸಿದ್ದಾರೆ.