ಶ್ರೀರಂಗಪಟ್ಟಣ: ‘ದೇಶದ ಆಂತರಿಕ ಮತ್ತು ಬಾಹ್ಯ ಭದ್ರತೆಗೆ ಭಯೋತ್ಪಾದನೆ ಕಂಟಕವಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿರುವ ಅದನ್ನು ನಿಗ್ರಹಿಸಲು ಸರ್ಕಾರಗಳು ಪಣ ತೊಟ್ಟು ಕೆಲಸ ಮಾಡಬೇಕು’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು.
ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ಏರ್ಪಡಿಸಿದ್ದ 69ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
‘ನಾಗರಿಕರು ನೆಮ್ಮದಿಯಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಬೇಕು. ಜಾತಿ, ವರ್ಗ, ವರ್ಣ, ಲಿಂಗ ತಾರತಮ್ಯ ಇಲ್ಲದೆ ಎಲ್ಲರೂ ಸಮಾನರು ಎಂಬ ಸಂವಿಧಾನದ ಆಶಯದಂತೆ ಜೀವಿಸುವುದನ್ನು ಕಲಿಯಬೇಕು. ಬಹು ಸಂಸ್ಕೃತಿಯನ್ನು ಒಪ್ಪಿಕೊಳ್ಳುವ ಜತೆಗೆ ಪರಸ್ಪರ ಗೌರವಿಸಬೇಕು. ನಮ್ಮದು ವಿಶ್ವದಲ್ಲಿ ಬಹುದೊಡ್ಡ ಪ್ರಜಾಪ್ರಭುತ್ವ ದೇಶವಾಗಿದ್ದು, ಅದರ ಮೌಲ್ಯಗಳಿಗೆ ಭಂಗ ಬಾರದಂತೆ ನಡೆದುಕೊಳ್ಳಬೇಕು. ರಾಷ್ಟ್ರೀಯ ಹಬ್ಬಗಳು ಮನೆ ಮನೆಯ ಹಬ್ಬವಾಗಬೇಕು’ ಎಂದು ಹೇಳಿದರು.
ತಹಶೀಲ್ದಾರ್ ಡಿ.ನಾಗೇಶ್ ಐತಿಹಾಸಿಕ ಬತೇರಿಯಲ್ಲಿ ಧ್ವಜಾರೋಹಣ ಮಾಡಿದರು. ‘ದೇಶ ಭಕ್ತಿ, ಐಕ್ಯತೆ, ಸಹೋದರತ್ವ ಭಾವನೆ ಬೆಳೆಯದಿದ್ದರೆ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಡಾ.ಅಂಬೇಡ್ಕರ್ ನೇತೃತ್ವದ ತಜ್ಞರ ಸಮಿತಿ ರಚಿಸಿರುವ ಭಾರತದ ಸಂವಿಧಾನಕ್ಕೆ ಗೌರವ ಕೊಡುವ ಪರಿಪಾಠ ಬೆಳೆಸಿಕೊಳ್ಳಬೇಕು’ ಎಂದರು.
ಪ್ರೊ. ಮೊಹಮದ್ ಮುಸ್ತಫಾ ಗಣರಾಜ್ಯೋತ್ಸವದ ಮಹತ್ವ ಕುರಿತು ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಬಸವರಾಜು, ಕಾರ್ಯನಿರ್ವಾಹಕ ಅಧಿಕಾರಿ ಕೆ.ಎ.ದರ್ಶನ್, ಕ್ಷೇತ್ರ ಶಿಕ್ಷಣಾಧಿಕಾರಿ ರುಕ್ಸಾನ ನಾಜನೀನ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಜೆ. ಶ್ರೀನಿವಾಸ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಟಿ. ರಾಜಶೇಖರ್, ಡಾ.ಬಿ. ನರಸಿಂಹಸ್ವಾಮಿ, ಸಿದ್ದಲಿಂಗು, ಕುಬೇರಪ್ಪ, ಪುರಸಭೆ ಸದಸ್ಯೆ ನಳಿನಾ ಇದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕೆ.ಶೆಟ್ಟಹಳ್ಳಿ: ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕಾಳೇಗೌಡ ಧ್ವಜಾರೋಹಣ ನೆರವೇರಿಸಿದರು.
ಉಪಾಧ್ಯಕ್ಷ ರಂಗಸ್ವಾಮಿ, ಮುರಳಿ, ಮುಖ್ಯಶಿಕ್ಷಕಿ ಸುಜಾತ, ತಾಲ್ಲೂಕು ಪಂಚಾಯಿತಿ ಸದಸ್ಯ ದೇವರಾಜು, ಎಪಿಎಂಸಿ ನಿರ್ದೇಶಕ ಕೆ.ಬಿ. ಮಹೇಶ್, ಯೋಗ ಶಿಕ್ಷಕ ಅಪ್ಪಾಜಿ, ಬಿ.ವಿ. ಸಾವಿತ್ರಿ ಇದ್ದರು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.