ಬಾಗಲಕೋಟೆ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಕೇರಳದ ದೇವಸ್ಥಾನವೊಂದರಲ್ಲಿ ಶಾಸ್ತ್ರೋಕ್ತವಾಗಿ ಮದುವೆಯಾಗಿದ್ದಾರೆ. ಅದರ ಸಿ.ಡಿ ನನ್ನ ಬಳಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತ ಭದ್ರತೆ ನೀಡಿದರೆ ಅದನ್ನು ಬಿಡುಗಡೆ ಮಾಡುವೆ’ ಎಂದು ಕರ್ನಾಟಕ ಜನತಾ ಪಕ್ಷದ (ಕೆಜೆಪಿ) ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ ಶನಿವಾರ ಇಲ್ಲಿ ತಿಳಿಸಿದರು.
‘ಈ ಹಿಂದೆ ಸಿ.ಡಿ ಬಿಡುಗಡೆ ಮಾಡಲು ಮುಂದಾಗಿದ್ದೆ. ಆಗ ನನ್ನ ಮೇಲೆ ಹಲ್ಲೆ ನಡೆಸಿದ್ದರು. ಆಗಿನಿಂದಲೂ ಶೋಭಾ ಅವರಿಂದ ನನಗೆ ಜೀವಭಯವಿದೆ. ಹೆದರಿಕೆಯಿಂದ ಕಳ್ಳನಂತೆ ತಲೆತಪ್ಪಿಸಿಕೊಂಡು ಓಡಾಡುತ್ತಿದ್ದೇನೆ. ಕಾರಿನಿಂದ ಕೆಳಗೆ ಇಳಿದರೆ ಯಾರಾದರೂ ತೊಂದರೆ ಮಾಡಿಯಾರು ಎಂಬ ಆತಂಕ ಕಾಡುತ್ತದೆ. ನನಗೆ ಏನಾದರೂ ಹೆಚ್ಚು ಕಡಿಮೆಯಾದರೆ ನನ್ನ ಕುಟುಂಬದ ಗತಿ ಏನು’ ಎಂದು ಸುದ್ದಿಗೋಷ್ಠಿಯಲ್ಲಿ ಅಲವತ್ತುಕೊಂಡ ಪದ್ಮನಾಭ ಕಣ್ಣೀರಿಟ್ಟರು.
‘ರಕ್ಷಣೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿಂದಿನ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಮನವಿ ಸಲ್ಲಿಸಿದ್ದೆ. ಅವರಿಂದ ಉತ್ತರವೇ ಬಂದಿಲ್ಲ. ಜೀವ ಬೆದರಿಕೆ ಹಿನ್ನೆಲೆಯಲ್ಲಿ ಶೋಭಾ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ’ ಎಂದು ಹೇಳಿದರು.
ಶೀಘ್ರ ಹುಬ್ಬಳ್ಳಿಯಲ್ಲಿ ಮನೆ
‘ಇಲ್ಲಿನ ತೇರದಾಳ ಹಾಗೂ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ನಾನೇ ಕೆಜೆಪಿ ಅಭ್ಯರ್ಥಿ. ರಾಜ್ಯದ 224 ಕ್ಷೇತ್ರಗಳಿಂದಲೂ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸಲು ಶೀಘ್ರವೇ ಹುಬ್ಬಳ್ಳಿಯಲ್ಲಿ ಬಾಡಿಗೆ ಮನೆ ಮಾಡುವೆ’ ಎಂದರು.