ಮುಳಬಾಗಿಲು: ‘ರೈತರ ಸಂಕಷ್ಟಕ್ಕೆ ಸ್ಪಂದಿಸದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.31ರಂದು ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಜೆ.ವೀರಭದ್ರಸ್ವಾಮಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೈತರು ಸಾಕಷ್ಟು ಕಷ್ಟ ಎದುರಿಸುತ್ತಿದ್ದಾರೆ. ಆದರೆ, ಪರಸ್ಪರ ಆರೋಪದಲ್ಲಿ ತೊಡಗಿರುವ ಸರ್ಕಾರಗಳಿಗೆ ರೈತರ ಕಷ್ಟದ ಅರಿವಿಲ್ಲ ಎಂದರು.
ಚುನಾವಣೆ ವೇಳೆ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುತ್ತೇವೆಂದು ಸುಳ್ಳು ಭರವಸೆ ನೀಡಿ ರೈತರ ಮತ್ತು ಜನರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬರುವ ಪಕ್ಷಗಳು ತಮ್ಮ ಭರವಸೆ ಮರೆತು ಬಿಡುತ್ತವೆ. ರೈತರಿಗೆ ಎರಡೂ ಸರ್ಕಾರಗಳು ಮಾಡಿರುವ ಮಹಾ ಮೋಸ ತಿಳಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸಹಕಾರಿ ಹಾಗು ರಾಷ್ಟ್ರೀಯ ಬ್ಯಾಂಕ್ಗಳಲ್ಲಿನ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ಸ್ವಾಮಿನಾಥ್ನ್ ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಎಸ್. ಗಂಗಾಧರ್, ಕಾರ್ಯದರ್ಶಿ ರಾಮಪ್ಪ, ಪ್ರಧಾನ ಕಾರ್ಯದರ್ಶಿ ರಾಮಬಾಬು, ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ರಮೇಶ್ ಹಾಜರಿದ್ದರು.