ಜೊಯಿಡಾ: ‘ವಿದ್ಯಾರ್ಥಿಗಳು ರಾಷ್ಟ್ರದ ಆಸ್ತಿಯಾಗಿದ್ದು, ದೇಶದ ಭವಿಷ್ಯ ಯುವ ಪೀಳಿಗೆ ಕೈಯಲ್ಲಿದೆ. ಹೀಗಾಗಿ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲ್ಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಮಂಜೂರಾದ ₹ 4.95 ಕೋಟಿ ವೆಚ್ಚದ 2ನೇ ಹಂತದ ಕಟ್ಟಡ ಕಾಮಗಾರಿ ಉದ್ಘಾಟಿಸಿ ಮಾತನಾಡಿದರು.
‘ಈ ಕಾಲೇಜನ್ನು ಟೊಯೋಟಾ ಕಂಪನಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಜೊಯಿಡಾವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತಾಗಿದೆ’ ಎಂದ ಅವರು, ‘ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಯುನಿವರ್ಸಲ್ ಆರೋಗ್ಯ ಯೋಜನೆಯಿಂದ ₹ 1.25 ಕೋಟಿ ಕುಟುಂಬಗಳಿಗೆ ಲಾಭ ದೊರೆಯಲಿದೆ. ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಬಡವರಿಗೆ ಉಚಿತ ಗ್ಯಾಸ್ ವಿತರಿಸುವ ಯೋಜನೆ ಹಾಕಿಕೊಳ್ಳಲಾಗಿದೆ’ ಎಂದರು.
ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ನರ್ಮದಾ ಪಾಟ್ನೇಕರ, ಜಿಲ್ಲಾ ಪಂಚಾಯ್ತಿ ಸದಸ್ಯ ರಮೇಶ ನಾಯ್ಕ, ಸಂಜಯ ಹಣಬರ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಶೈಲಾ ನಾಯ್ಕ, ಉಪಾಧ್ಯಕ್ಷ ಶ್ಯಾಮ ಪೊಕಳೆ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ವಿಜಯ ಪಂಡಿತ ಉಪಸ್ಥಿತರಿದ್ದರು.