ರಾಮನಗರ: ಬೆಂಗಳೂರಿನಲ್ಲಿ ಭಾನುವಾರ ನಡೆಯಲಿರುವ ಬಿಜೆಪಿ ಸಮಾವೇಶಕ್ಕೆ ತೆರಳುವ ಸಲುವಾಗಿ ಸಾವಿರಾರು ಸಂಖ್ಯೆಯಲ್ಲಿ ವಾಹನಗಳು ರಸ್ತೆಗೆ ಇಳಿದಿದ್ದವು. ಇದರಿಂದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಬೆಳಗ್ಗೆಯಿಂದಲೇ ಸಂಚಾರ ದಟ್ಟಣೆ ಸಮಸ್ಯೆಯಾಗಿತ್ತು. ರಾಮನಗರದಲ್ಲಿ ಆಗಾಗ್ಗೆ ಕಿಲೋಮೀಟರ್ ಉದ್ದಕ್ಕೆ ವಾಹನಗಳು ಸಾಲಾಗಿ ನಿಂತಿದ್ದವು.
ಉಪಾಹಾರ ವ್ಯವಸ್ಥೆ: ಸಮಾವೇಶದಲ್ಲಿ ಪಾಲ್ಗೊಳ್ಳಲು ಬಂದಿರುವ ಮಂಗಳೂರು. ಮಡಿಕೇರಿ, ಮೈಸೂರು ಹಾಗೂ ಸುತ್ತಲಿನ ಜಿಲ್ಲೆಗಳ ಸಾವಿರಾರು ಕಾರ್ಯಕರ್ತರಿಗೆ ಇಲ್ಲಿನ ಜಾನಪದ ಲೋಕದ ಬಳಿ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಟೊಮೆಟೊ ಬಾತ್, ಕೇಸರಿ ಬಾತ್ ಅನ್ನು ಬಡಿಸಲಾಯಿತು.
ಬಂಧನ–ಬಿಡುಗಡೆ : ಬೆಂಗಳೂರಿನಲ್ಲಿ ಭಾನುವಾರ ನಡೆಯುವ ಬಿಜೆಪಿ ಪರಿವರ್ತನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ತಮ್ಮ ಭಾಷಣದಲ್ಲಿ ಮಹದಾಯಿ ವಿಚಾರ ಪ್ರಸ್ತಾಪ ಮಾಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಇಲ್ಲಿನ ಐಜೂರು ವೃತ್ತದಲ್ಲಿ ಭಾನುವಾರ ಪ್ರತಿಭಟಿಸಿದರು. ಪ್ರತಿಭಟನೆ ನಡೆಸುತ್ತಿದ್ದ ರೈತ ಸಂಘದ ಕಾರ್ಯಕರ್ತರನ್ನು ಐಜೂರು ಠಾಣೆ ಪೊಲೀಸರು ವಶಕ್ಕೆ ಪಡೆದರು. ನಂತರ ಬಿಡುಗಡೆ ಮಾಡಿದರು.