ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಮಜ್ಜನ; ಭದ್ರತೆಗೆ 5 ಸಾವಿರ ಪೊಲೀಸರು

Last Updated 6 ಫೆಬ್ರುವರಿ 2018, 10:10 IST
ಅಕ್ಷರ ಗಾತ್ರ

ಶ್ರವಣಬೆಳಗೊಳ: ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಭದ್ರತೆಗೆ 5 ಸಾವಿರಕ್ಕೂ ಅಧಿಕ ಸಿಬ್ಬಂದಿ ನಿಯೋಜಿಸಲಾಗುತ್ತಿದೆ. ಕೆಎಸ್ಆರ್‌ಪಿ ತುಕಡಿ, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ದಳ, ಭಯೋತ್ಪಾದನಾ ನಿಗ್ರಹ ದಳ, ಗರುಡಾ ವಾಹನ, ಗೃಹರಕ್ಷಕ ದಳ ಸಿಬ್ಬಂದಿ ಕಾರ್ಯ ನಿರ್ವಹಿಸುವರು.

ಅಪರಾಧ ತಡೆಗೆ ನಿಗಾವಹಿಸಲು 100 ಮಂದಿ ಹ್ಯಾಂಡಿಕ್ಯಾಮ್ ವಿಡಿಯೊಗ್ರಾಫರ್‌ಗಳನ್ನು ಬಳಸಿಕೊಳ್ಳ ಲಾಗುತ್ತಿದೆ. ಹಾಗೆಯೇ 150 ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಟ್ಟಣಿಗೆ, ಬೆಳಗೊಳ ಪ್ರವೇಶಿಸುವ ಎಲ್ಲಾ ರಸ್ತೆ ಮಾರ್ಗಗಳು, ಆಯಾಕಟ್ಟಿನ ಸ್ಥಳಗಳಲ್ಲಿ ಅಳವಡಿಸಲಾಗಿದೆ. ಫೆ. 2ರಿಂದಲೇ ಮಹೋತ್ಸವದ ಧಾರ್ಮಿಕ ವಿಧಿವಿಧಾನ ಆರಂಭಗೊಂಡಿದ್ದು, ದಿನದಿಂದ ದಿನಕ್ಕೆ ಭಕ್ತರು, ಯಾತ್ರಾರ್ಥಿಗಳು, ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದೆ.

ಫೆ. 7ರಿಂದ ಮಹೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಗುತ್ತದೆ. ಖಾಸಗಿ ವಾಹನಗಳಿಗೆ ಬೆಳಗೊಳಕ್ಕೆ 3–4 ಕಿ.ಮೀ. ದೂರದಲ್ಲಿಯೇ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ. ಸ್ಥಳೀಯರ ವಾಹನಗಳ ಸಮೀಕ್ಷೆ ಮಾಡಲಾಗಿದ್ದು, ಅವರಿಗೆ ಪಾಸ್‌ ನೀಡಲಾಗುತ್ತದೆ. ಪಾರ್ಕಿಂಗ್‌ ಸ್ಥಳದಿಂದಲೇ ಸಾರ್ವಜನಿಕರನ್ನು ಕ್ಷೇತ್ರಕ್ಕೆ ಕರೆತರಲು ಕೆಎಸ್‌ಆರ್‌ಟಿಸಿಯು 75 ಮಿನಿ ಬಸ್‌ ಸಂಚಾರ ವ್ಯವಸ್ಥೆ ಮಾಡಿದೆ.

‘ಕಾನೂನು, ಸುವ್ಯವಸ್ಥೆ ಹದಗೆಡದಂತೆ ಆಯಾ ಕಟ್ಟಿನ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು. 16,500 ಕಾರುಗಳನ್ನು ಏಕಕಾಲಕ್ಕೆ ಪಾರ್ಕಿಂಗ್‌ ಮಾಡಬಹುದು. ಸಾರ್ವಜನಿಕರು ಹೆಚ್ಚು ಲಗ್ಗೇಜ್‌ ತರಬಾರದು. ಬೆಟ್ಟದ ಮೇಲೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ವಾರಾಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿರುವ ಕಾರಣ ಇತರೆ ದಿನಗಳಲ್ಲಿ ಬರುವುದು ಒಳ್ಳೆಯದು’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ಕುಮಾರ್‌ ಶಹಪುರವಾಡ್  ತಿಳಿಸಿದರು.

‘ಮಹಾಮಸ್ತಕಾಭಿಷೇಕ ಕಾರ್ಯಕ್ರ ಮ ಕುರಿತ ಮಾಹಿತಿಯನ್ನು ಫೇಸ್ ಬುಕ್ ಮತ್ತು ಟ್ವಿಟರ್ ಮೂಲಕ ಸಾರ್ವಜನಿಕರಿಗೆ ಒದಗಿಸಲಾಗುವುದು. ಹೆಚ್ಚಿನ ಜನರು ಇವುಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ ಪರಿಣಾಮ ಕಾರಿಯಾಗಿ ಬಳಸಿಕೊಳ್ಳಲಾಗುವುದು. ಪ್ರವಾಸಿಗರು, ಯಾತ್ರಾರ್ಥಿಗಳಿಗೆ ಅನುಕೂಲವಾಗುವಂತೆ ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಮಾಹಿತಿ ರವಾನೆ ಮಾಡುವ ವ್ಯವಸ್ಥೆ ಮಾಡಲಾಗಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT