ಬೆಂಗಳೂರು: ಇಂದಿರಾ ಕ್ಯಾಂಟೀನ್ಗಳಿಗೆ ಜಾಗ ಸಿಗದ 24 ವಾರ್ಡ್ಗಳಲ್ಲಿ ಸಂಚಾರಿ ಕ್ಯಾಂಟೀನ್ಗಳ ಮೂಲಕ ಆಹಾರ ಪೂರೈಸುವ ಯೋಜನೆಗೆ ಚಾಲನೆ ನೀಡಿ 10 ದಿನಗಳು ಕಳೆದಿವೆ. ಆದರೆ, ಅವು ಈವರೆಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿಲ್ಲ.
ವಿಧಾನಸೌಧ ಆವರಣದಲ್ಲಿ ಜನವರಿ 26ರಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 18 ಸಂಚಾರಿ ಕ್ಯಾಂಟೀನ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು.
24 ವಾರ್ಡ್ಗಳ ಪೈಕಿ ಕೆಲವೆಡೆ ಸಂಚಾರಿ ಕ್ಯಾಂಟೀನ್ಗಳು ಕಾರ್ಯಾರಂಭ ಮಾಡಿವೆ. ಇನ್ನೂ ಕೆಲವೆಡೆ ಪ್ರಾಯೋಗಿಕವಾಗಿ ಸಂಚಾರ ನಡೆಸುತ್ತಿವೆ. ವಾಹನದಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಬೇಕಿದೆ. ಇದೇ 10ರಿಂದ 24 ಕ್ಯಾಂಟೀನ್ಗಳು ಕಾರ್ಯಾರಂಭ ಮಾಡಲಿವೆ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.
ವಾರ್ಡ್ಗಳಲ್ಲಿ ವಾಹನ ನಿಲ್ಲಿಸುವ ಜಾಗವನ್ನು ಅಂತಿಮಗೊಳಿಸಿ, ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು. ವಾಹನಗಳು ಯಾವ ಮಾರ್ಗದಲ್ಲಿ ಸಂಚರಿಸಬೇಕು ಎಂಬುದನ್ನು ನಿಗದಿಪಡಿಸಿದ ಬಳಿಕ ಸೇವೆ ಆರಂಭವಾಗಲಿದೆ ಎಂದು ಪಾಲಿಕೆಯ ಅಧಿಕಾರಿಯೊಬ್ಬರು ಹೇಳಿದರು.