ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕಾಕ ಜಿಲ್ಲೆ ರಚನೆಗೆ ಆಗ್ರಹಿಸಿ ಪ್ರತಿಭಟನೆ

Last Updated 9 ಫೆಬ್ರುವರಿ 2018, 9:13 IST
ಅಕ್ಷರ ಗಾತ್ರ

ಗೋಕಾಕ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಖ್ಯಮಂತ್ರಿಗಳ ಮೇಲೆ ಒತ್ತಡ ಹೇರಿದ್ದಾದರೆ ನಿಸ್ಸಂಶಯವಾಗಿ ಗೋಕಾಕ ಜಿಲ್ಲೆಯಾಗುವುದರಲ್ಲಿ ಯಾವುದೇ ಅನುಮಾನವೇ ಇಲ್ಲ ಎಂದು ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟ ಪಡಿಸಿದರು.

ಗುರುವಾರ ಇಲ್ಲಿಯ ಬಸವೇಶ್ವರ ವೃತ್ತದಲ್ಲಿ ಗೋಕಾಕ ನೂತನ ಜಿಲ್ಲಾ ಕೇಂದ್ರವನ್ನಾಗಿಸುವಂತೆ ಆಗ್ರಹಿಸಿ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯಿಂದ ನಡೆದ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ಮಾತನಾಡಿದರು.

ಅವಿಭಜಿತ ಬೃಹತ್‌ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಜಿಲ್ಲಾ ಕೇಂದ್ರವನ್ನಾಗಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಜಿಲ್ಲೆ ಮಾಡುವ ವಿಶ್ವಾಸ ಹೊಂದಿದ್ದಾರೆಂದು ಹೇಳಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಕಳೆದ ಡಿ.21ರಂದು ಗೋಕಾಕ ನಗರಕ್ಕೆ ಬಂದಿದ್ದ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಜಿಲ್ಲೆಯನ್ನು ವಿಂಗಡಿಸಿ ಹೊಸ ಜಿಲ್ಲೆಗಳ ರಚನೆಗೆ ತಮ್ಮದೇನೂ ಅಭ್ಯಂತರವಿಲ್ಲ. ಆದರೆ ಬೆಳಗಾವಿಯ ಕೆಲ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಹೋರಾಟವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿರುವ ನಾವುಗಳು ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸಿಎಂ ಅವರನ್ನು ಭೇಟಿ ಮಾಡಿ ಮತ್ತೊಮ್ಮೆ ಮನವಿ ಮಾಡಿಕೊಳ್ಳೋಣ ಎಂದು ಹೇಳಿದರು.

ಫೆ. 16 ರಿಂದ 28 ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಅದರೊಳಗೆ ಗೋಕಾಕದಿಂದ ನಿಯೋಗವನ್ನು ಒಯ್ಯಲಾಗುವುದು. ತಾಲ್ಲೂಕಿನ ಮಠಾಧೀಶರು, ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ತಾಲ್ಲೂಕಿನ ಮುಖಂಡರುಗಳನ್ನೊಳಗೊಂಡ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗೋಕಾಕ ಜಿಲ್ಲೆಯನ್ನಾಗಿಸಲು ಆಗ್ರಹಿಸಲಾಗುವುದು ಎಂದು ಹೇಳಿದರು.

ಕೌಜಲಗಿ ತಾಲ್ಲೂಕು ರಚಿಸಿ: ಗೋಕಾಕ ತಾಲ್ಲೂಕಿನ ಕೌಜಲಗಿ ಪಟ್ಟಣವನ್ನು ಹೊಸ ತಾಲ್ಲೂಕು ಕೇಂದ್ರವನ್ನಾಗಿ ರಚಿಸುವಂತೆ ಸಿದ್ಧರಾಮಯ್ಯ ಅವರಲ್ಲಿ ಮನವಿ ಮಾಡಿಕೊಂಡ ಅವರು, ತಾಲ್ಲೂಕು ಹೋರಾಟಕ್ಕಾಗಿ 40 ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿರುವ ಕೌಜಲಗಿ ಭಾಗದವರ ಹೋರಾಟಕ್ಕೆ ನ್ಯಾಯ ಒದಗಿಸಿಕೊಡುವಂತೆ ಕೋರಿದರು.

ಸಮಿತಿ ಅಧ್ಯಕ್ಷ, ಶೂನ್ಯ ಸಂಪಾದನಮಠದ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಗೋಕಾಕ ಜಿಲ್ಲಾ ಹೋರಾಟದಲ್ಲಿ ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಾಲ್ಗೊಳ್ಳುವ ಮೂಲಕ ನಮಗೆಲ್ಲ ಆನೆಬಲ ಬಂದಂತಾಗಿದೆ ಎಂದು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಎಸ್.ವಿ.ದೇಮಶೆಟ್ಟಿ ಮಾತನಾಡಿ, ಬೆಳಗಾವಿ ಜಿಲ್ಲೆ ವಿಭಜನೆಗೆ ಕೆಲವು ಸಂಘಟನೆಗಳು ಅಡ್ಡಿಪಡಿಸುತ್ತಿರುವುದು ವಿಷಾದನೀಯ. ಜಿಲ್ಲಾ ಹೋರಾಟಕ್ಕೆ ಸಂಘದಿಂದ ಸಂಪೂರ್ಣ ಬೆಂಬಲ ನೀಡುತ್ತಿದ್ದೇವೆ. ಉಪವಿಭಾಗಾಧಿಕಾರಿಗಳ ಕಾರ್ಯಾಲಯವನ್ನು ಗೋಕಾಕದಲ್ಲಿಯೇ ಶೀಘ್ರದಲ್ಲಿಯೇ ಆರಂಭಿಸಬೇಕು. ಯಾವುದೇ ಕಾರಣಕ್ಕೂ ಬೈಲಹೊಂಗಲಕ್ಕೆ ಹೋಗುವುದಿಲ್ಲ. ನಮ್ಮ ಕಾರ್ಯಕಲಾಪಗಳ ಅನುಕೂಲಕ್ಕಾಗಿ ಗೋಕಾಕದಲ್ಲಿಯೇ ಪ್ರಾರಂಭಿಸಿ ಎಂದು ಸರ್ಕಾರವನ್ನು ಆಗ್ರಹಿಸಿದರು.

ನಗರಸಭೆ ಅಧ್ಯಕ್ಷ ತಳದಪ್ಪ ಅಮ್ಮಣಗಿ, ನಗರಸಭೆ ಮಾಜಿ ಅಧ್ಯಕ್ಷರಾದ ಸಿದ್ದಲಿಂಗ ದಳವಾಯಿ, ಎಸ್.ಎ. ಕೋತವಾಲ, ಲಗಮವ್ವಾ ಸುಲಧಾಳ, ಹಿರಿಯ ವಕೀಲ ಬಿ.ಆರ್. ಕೊಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಢವಳೇಶ್ವರ, ಜಿ.ಪಂ. ಸದಸ್ಯರಾದ ತುಕಾರಾಮ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರಾದ ನಿಂಗಪ್ಪ ಫಿರೋಜಿ, ಅಶೋಕ ಪರುಶೆಟ್ಟಿ ಪಾಲ್ಗೊಂಡಿದ್ದರು.

ಮುರುಘರಾಜೇಂದ್ರ ಸ್ವಾಮೀಜಿ ತಹಶೀಲ್ದಾರ್‌ ಜಿ.ಎಸ್.ಮಾಳಗಿ ಅವರಿಗೆ ಮನವಿ ಅರ್ಪಿಸಿದರು. ಇದಕ್ಕೂ ಮುನ್ನ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮಾಲಾರ್ಪನೆ ಮಾಡುವ ಮೂಲಕ ರ‍್ಯಾಲಿಗೆ ಚಾಲನೆ ನೀಡಲಾಯಿತು. ಬಳಿಕ ರಾಯಣ್ಣನ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಬೃಹತ್ ಮೆರವಣಿಗೆ ಮೂಲಕ ಬಂದು ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಸಿ.ಎಂ ಭೇಟಿ ನಂತರ ಮುಂದಿನ ಹೋರಾಟದ ನಿರ್ಧಾರ

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ನಂತರ ಮುಂದಿನ ಹೋರಾಟದ ರೂಪುರೇಷೆಗಳನ್ನು ಹಾಕಿಕೊಳ್ಳಲಾಗುವುದು. ಸಿದ್ದರಾಮಯ್ಯನವರ ಮನೋಭಾವನೆ ಹಾಗೂ ಅವರು ತೆಗೆದುಕೊಳ್ಳುವ ನಿರ್ಧಾರವನ್ನು ಅರಿತು ಹೋರಾಟಕ್ಕೆ ಅಣಿಯಾಗೋಣ. ಅಲ್ಲಿಯವರೆಗೆ ಶಾಂತ ರೀತಿಯಿಂದ ಗೋಕಾಕ ಪ್ರತ್ಯೇಕ ಜಿಲ್ಲೆಗಾಗಿ ಮುರುಘರಾಜೇಂದ್ರ ಸ್ವಾಮೀಜಿಯವರ ನೇತೃತ್ವದಲ್ಲಿ ಹೋರಾಟಕ್ಕೆ ಇಳಿಯೋಣ ಎಂದರು. ವಕೀಲರ ಸಂಘಕ್ಕೆ ಅಭಿನಂದನೆ: ಜಿಲ್ಲಾ ಸಲುವಾಗಿ ನಡೆಯುತ್ತಿರುವ ಹೋರಾಟವನ್ನು ಜೀವಂತಗೊಳಿಸಿದ ಕೀರ್ತಿ ವಕೀಲರ ಸಂಘಕ್ಕೆ ಸಲ್ಲುತ್ತದೆ ಎಂದು ಅಭಿನಂದಿಸಿದರು.

* * 

ಜಿಲ್ಲೆಗಾಗಿ ಎಂತಹ ಹೋರಾಟಕ್ಕೂ ಸಿದ್ಧರಿದ್ದೇವೆ. ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಹೊಸ ಜಿಲ್ಲೆ ಆಗಲೇಬೇಕು
ಎಂ.ಎಲ್. ಮುತ್ತೆನ್ನವರ
ಮಾಜಿ ಶಾಸಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT