ಬೆಂಗಳೂರು: ಬಿಜೆಪಿ ನಾಯಕರು ರಾಜ್ಯದ ವಿವಿಧ ಕೊಳೆಗೇರಿಗಳಲ್ಲಿ ಶನಿವಾರ (ಫೆ.10) ವಾಸ್ತವ್ಯ ಹೂಡಲಿದ್ದಾರೆ.
ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಶಾಸಕ ಆರ್. ಅಶೋಕ್, ಸಂಸದ ಪಿ.ಸಿ. ಮೋಹನ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಇಲ್ಲಿನ ಗಾಂಧಿ ನಗರದ ಕೊಳೆಗೇರಿಯಲ್ಲಿ ಉಳಿಯಲಿದ್ದಾರೆ.
ವಿರೋಧ ಪಕ್ಷದ ನಾಯಕರಾದ ಜಗದೀಶ ಶೆಟ್ಟರ್ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರ ಕೊಳೆಗೇರಿ, ಕೆ.ಎಸ್. ಈಶ್ವರಪ್ಪ ಶಿವಮೊಗ್ಗದ ಎನ್.ಟಿ. ರಸ್ತೆಯ ಮಂಡಲಿ ಕೊಳೆಗೇರಿ, ಶಾಸಕ ಗೋವಿಂದ ಕಾರಜೋಳ ವಿಜಯಪುರದ ಸಮಗಾರ ಓಣಿ, ಸಂಸದೆ ಶೋಭಾ ಕರಂದ್ಲಾಜೆ ಮೈಸೂರಿನ ಕ್ಯಾತಮಾರನಹಳ್ಳಿ ಕೊಳೆಗೇರಿಯಲ್ಲಿ ವಾಸ್ತವ್ಯ ಮಾಡುವರು.
ಕೊಳೆಗೇರಿ ನಿವಾಸಿಗಳ ಬಗ್ಗೆ ತಮ್ಮ ಬದ್ಧತೆ ಸಾರಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಒಂದು ರಾತ್ರಿ ಕೊಳೆಗೇರಿಗಳಲ್ಲಿನ ಒಂದು ಮನೆಯಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಎನ್. ರವಿಕುಮಾರ್ ತಿಳಿಸಿದರು.