ಬೆಂಗಳೂರು: ‘ಬಿಜೆಪಿ ನಗರ ಜಿಲ್ಲಾ ಘಟಕದ ವಕ್ತಾರ ಎನ್.ಆರ್.ರಮೇಶ್ ಹೆಸರು ಹೇಳಿಕೊಂಡು ಮನೆಗೆ ನುಗ್ಗಿದ್ದ 10ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಪದ್ಮನಾಭನಗರದ ನಿವಾಸಿ ದೇವರಾಜ್ ಎಂಬುವರು ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
‘ಸ್ಥಳೀಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಜೆಡಿಎಸ್ ಮುಖಂಡ ವಿ.ಕೆ.ಗೋಪಾಲ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆದಿತ್ತು. ಅದಕ್ಕೆ ಸಹಕಾರ ನೀಡಿದ್ದೆ. ಅಷ್ಟಕ್ಕೆ ಕೋಪಗೊಂಡ ಬಿಜೆಪಿ ಕಾರ್ಯಕರ್ತರು ಭಾನುವಾರ ಮಧ್ಯಾಹ್ನ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಕುಟುಂಬದವರನ್ನು ಬೆದರಿಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರು, ‘ಕಾರ್ಯಕ್ರಮದ ಪ್ರಯುಕ್ತ ಹಲವರಿಗೆ ಕುಕ್ಕರ್ ಹಂಚಲಾಗಿತ್ತು. ಅದನ್ನು ಪ್ರಶ್ನಿಸಿ ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿರುವುದು ಗೊತ್ತಾಗಿದೆ. ದೇವರಾಜ್ ಅವರು ನೀಡಿರುವ ದೂರಿನನ್ವಯ ಎಫ್ಐಆರ್ ದಾಖಲಿಸಿಕೊಂಡಿದ್ದೇವೆ’ ಎಂದರು.