ಮೈಸೂರು: ಬಿಜೆಪಿ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಾಸ್ತವ್ಯ ಹೂಡಿರುವ ರ್ಯಾಡಿಸನ್ ಬ್ಲೂ ಹೋಟೆಲ್ ಎದುರು ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಭಾನುವಾರ ರಾತ್ರಿ ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೋದಿ ಅವರು ಈ ಹೋಟೆಲ್ನಲ್ಲಿ ತಂಗಿದ್ದಾರೆ. ಹೆಚ್ಚಿನ ಭದ್ರತೆ ಒದಗಿಸಿದ್ದು, ಮಾಲ್ ಆಫ್ ಮೈಸೂರ್ ತೆರೆದಿದ್ದರು ವಹಿವಾಟು ನಡೆಯುತ್ತಿಲ್ಲ.
ತರಕಾರಿ ಮಾರುಕಟ್ಟೆ ವಹಿವಾಟಿಗೆ ಪೊಲೀಸರು ಅವಕಾಶ ಕಲ್ಪಿಸಿದ್ದಾರೆ. ಹೋಟೆಲ್ ಸಮೀಪದ ಎಲ್ಲ ರಸ್ತೆಗಳಲ್ಲೂ ಬ್ಯಾರಿಕೇಡ್ ಹಾಕಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಚಾಮುಂಡಿಬೆಟ್ಟಕ್ಕೆ ತೆರಳುವ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಾಗುತ್ತಿವೆ.
ಬಿಜೆಪಿ ಮುಖಂಡರಿಗೆ ಮಾತ್ರ ಹೋಟೆಲ್ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿಯನ್ನು ಕಾಣಲು ಹೋಟೆಲ್ ಎದುರು ಸಾರ್ವಜನಿಕರು ಕಾತುರದಿಂದ ಕಾಯುತ್ತಿದ್ದಾರೆ.