ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಂಡಿದೆ. ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೇ ಆರಂಭವಾಗಿರುವ ಈ ಹೊತ್ತಿನಲ್ಲಿ ಮೋದಿ ಅವರ ಭೇಟಿ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಹುರುಪು ತುಂಬಲಿದೆ.
ಮಹಾರಾಜ ಕಾಲೇಜು ಮೈದಾನದಲ್ಲಿ ಸಂಜೆ ನಾಲ್ಕು ಗಂಟೆಗೆ ಆರಂಭವಾಗಲಿರುವ ಬಿಜೆಪಿ ಬೃಹತ್ ಸಮಾವೇಶದಲ್ಲಿ ಲಕ್ಷಕ್ಕೂ ಅಧಿಕ ಜನರನ್ನು ಸೇರಿಸಲು ವ್ಯವಸ್ಥೆ ಮಾಡಲಾಗಿದೆ.
ಪ್ರಧಾನಿಯಾದ ಮೇಲೆ ಎರಡನೇ ಭೇಟಿ
ಮೈಸೂರು: 2014ರ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಮೋದಿ ಅವರು ಪ್ರಧಾನಿಯಾದ ಮೇಲೆ ಮೈಸೂರಿಗೆ ಎರಡನೇ ಬಾರಿ ಭೇಟಿ ನೀಡುತ್ತಿದ್ದಾರೆ. 2016ರ ಜನವರಿಯಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ನಡೆದ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿದ್ದರು.
ಮುಖಂಡರೊಂದಿಗೆ ಪ್ರತ್ಯೇಕ ಚರ್ಚೆ
ಮೈಸೂರು: ರ್ಯಾಡಿಸನ್ ಬ್ಲ್ಯೂ ಹೋಟೆಲಿನಲ್ಲಿ ವಾಸ್ತವ್ಯ ಹೂಡಲಿರುವ ಪ್ರಧಾನಿ ಮೋದಿ ಅವರು ಸೋಮವಾರ ಬೆಳಿಗ್ಗೆ ಪಕ್ಷದ ಮುಖಂಡರೊಂದಿಗೆ ಪ್ರತ್ಯೇಕ ಚರ್ಚೆ ನಡೆಸುವ ಸಾಧ್ಯತೆ ಇದೆ.
ಮುಂಬರುವ ಚುನಾವಣೆಯಲ್ಲಿ ಈ ಭಾಗದಲ್ಲಿ ನಡೆಸಬೇಕಾದ ಪ್ರಚಾರ ವೈಖರಿ, ರೂಪಿಸಬೇಕಾದ ರಣತಂತ್ರಗಳ ಬಗ್ಗೆ ಸಮಾಲೋಚನೆ ನಡೆಸುವ ಸಂಭವವಿದೆ.
ಮೈದಾನ ಫ್ಲೆಕ್ಸ್ಮಯ…
ಮೈಸೂರು: ಬಿಜೆಪಿ ಸಮಾವೇಶ ನಡೆಯಲಿರುವ ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತಲಿನ ಪ್ರದೇಶ ಫ್ಲೆಕ್ಸ್, ಬ್ಯಾನರ್ಮಯವಾಗಿದೆ. ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ.
‘ಸ್ವಚ್ಛ ಭಾರತ’ ಘೋಷಣೆಯಡಿ ಮೋದಿ ಅವರು ಪೊರಕೆ ಹಿಡಿದು ಸ್ವಚ್ಛಗೊಳಿಸುವ ಚಿತ್ರದ ಸುತ್ತಮುತ್ತಲೇ ಫ್ಲೆಕ್ಸ್ ಹಾಕಲಾಗಿದೆ. ಫ್ಲೆಕ್ಸ್ನಲ್ಲಿ ಮೋದಿ ಭಾವಚಿತ್ರದ ಜೊತೆಗೆ ವಿವಿಧ ಮುಖಂಡರು ತಮ್ಮ ಭಾವಚಿತ್ರಗಳನ್ನು ಮುದ್ರಿಸಿದ್ದಾರೆ. ಇದಲ್ಲದೆ, ವಿವಿಧ ವೃತ್ತಗಳಲ್ಲಿ ಫ್ಲೆಕ್ಸ್ ಅಳವಡಿಸಲಾಗಿದೆ.
* *
ವಿವಿಧೆಡೆ ರ್ಯಾಲಿಗಳಲ್ಲಿ ಪಾಲ್ಗೊಳ್ಳುತ್ತಿರುವ ಮೋದಿ, ಚುನಾವಣೆ ಪ್ರಕಟವಾದ ಮೇಲೆ ಬಹುತೇಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಾರೆ. ಪ್ರಚಾರಕ್ಕೆ ಹೆಚ್ಚಿನ ದಿನ ಮೀಸಲಿಡುತ್ತಾರೆ
ವಿ.ಸೋಮಣ್ಣ ವಿಧಾನ ಪರಿಷತ್ ಸದಸ್ಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.