ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಮಾರ್ಚ್ 2 ರಂದು ಕನಕದಾಸರ ಕಂಚಿನ ಪ್ರತಿಮೆ ಅನಾವರಣಗೊಳಿಸಲಾಗುವುದು ಎಂದು ಸಾರಿಗೆ ಸಚಿವರ ಎಚ್.ಎಂ.ರೇವಣ್ಣ ಹೇಳಿದ್ದಾರೆ.
12 ಅಡಿ ಎತ್ತರದ 1,200 ಕಿಲೋ ಗ್ರಾಂ ತೂಕದ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸುವರು ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಶಿಲ್ಪಿ ಅಶೋಕ್ ಗುಡಿಗಾರ್ ಪ್ರತಿಮೆಯನ್ನು ತಯಾರಿಸಿದ್ದಾರೆ. ರಾಜ್ಯದ ಜನತೆಯ ಹೆಮ್ಮೆಯ ಪ್ರತೀಕವಾಗಿ ಪ್ರತಿಮೆ ಸ್ಥಾಪಿಸಲಾಗುತ್ತಿದೆ ಎಂದು ಅವರು ಹೇಳಿದರು.
‘ಇಂದಿರಾ ಸಾರಿಗೆ’ ಕುರಿತು ಸಭೆ:
ನಗರದಲ್ಲಿ ‘ಇಂದಿರಾ ಸಾರಿಗೆ’ಯನ್ನು ಆರಂಭಿಸುವ ಸಂಬಂಧ ವಿವಿಧ ಇಲಾಖೆಗಳ ಜೊತೆ ಮೂರು ಸುತ್ತಿನ ಚರ್ಚೆ ನಡೆಸಲಾಗಿದೆ. ಬೆಂಗಳೂರು ಸುತ್ತಮುತ್ತಲಿನ ಎರಡು ಲಕ್ಷ ಮಹಿಳಾ ಕಾರ್ಮಿಕರಿಗೆ ಇದರಿಂದ ಅನುಕೂಲವಾಗಲಿದೆ ಎಂದು ರೇವಣ್ಣ ತಿಳಿಸಿದರು.
ಇಂದಿರಾ ಸಾರಿಗೆ ಯೋಜನೆಯನ್ನು ಮಾರ್ಚ್ 10 ರೊಳಗೆ ಜಾರಿಗೆ ಮಾಡಲಾಗುವುದು ಎಂದೂ ಅವರು ಹೇಳಿದರು.