ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಗುರುವಾರ ಮಧ್ಯರಾತ್ರಿಯಿಂದ ವ್ಯಾಪಕವಾಗಿ ಮಳೆ, ಹಿಮ ಸುರಿದಿದೆ. ಭೂಕುಸಿತ ಕಾರಣ 300 ಕಿ.ಮೀ ಉದ್ದದ ಜಮ್ಮು– ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಶುಕ್ರವಾರ ನಿಲ್ಲಿಸಲಾಗಿದೆ.
ಜಮ್ಮು– ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾಂಬನ್ ಜಿಲ್ಲೆಯ ವ್ಯಾಪ್ತಿಯಲ್ಲಿ ಕಲ್ಲು ಬಂಡೆಗಳು ಕುಸಿದು ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಹೀಗಾಗಿ ವಾಹನ ಸಂಚಾರವನ್ನು ನಿಲ್ಲಿಸಲಾಗಿದೆ. ಪ್ರಯಾಣಿಕರು ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಿ ವಿಷಯ ತಿಳಿದುಕೊಂಡು ಈ ಹೆದ್ದಾರಿಯನ್ನು ಪ್ರವೇಶಿಸಬೇಕು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಾಜ್ಯದ ಶಿಖರಗಳಲ್ಲಿ ಹಿಮ ಮತ್ತು ತಗ್ಗು ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಹಿಮಪಾತ ಕಾರಣ ಕುಪ್ವರ – ತಂಗಧರ್ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.