ಮೈಸೂರು: ಕೋಮುವಾದಿ ಬಿಜೆಪಿಯನ್ನು ಮಣಿಸಲು ರಾಷ್ಟ್ರಮಟ್ಟದಲ್ಲಿ ಜಾತ್ಯಾತೀತ ಶಕ್ತಿಗಳು ಒಗ್ಗೂಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರದು. ಸ್ಥಳೀಯ ಪಕ್ಷಗಳೊಂದಿಗೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದ್ದು ಗೆಲುವಿಗೆ ಕಾರಣ. ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಬಿಜೆಪಿಗೆ ರಾಜ್ಯದ ಜನ ಮತ ಹಾಕುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.
ಜೆಡಿಎಸ್ ಮತ್ತು ಬಿಎಸ್ಪಿ ಪಕ್ಷಗಳ ಹೊಂದಾಣಿಕೆಯಿಂದ ಕಾಂಗ್ರೆಸ್ಗೆ ತೊಂದರೆ ಆಗದು. ಚುನಾವಣೆಯಲ್ಲಿ ಇದು ಯಾವುದೇ ಪರಿಣಾಮ ಬೀರದು. ಕೋಮುವಾದಿ ಬಿಜೆಪಿ ಸೋಲಿಸುವುದೇ ನಮ್ಮ ಗುರಿ ಎಂದು ಹೇಳಿದರು.
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ದೆಹಲಿಗೆ ಹೊರಟಿದ್ದೇನೆ. ಪಕ್ಷದ ಅಭ್ಯರ್ಥಿ ಯಾರು ಎಂಬುದು ಕೂಡ ನಿರ್ಧಾರ ಆಗಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜೆಡಿಎಸ್ ಅಗತ್ಯವಿಲ್ಲ ಎಂದರು.
ಅಶೋಕ್ ಖೇಣಿ ಅವರು ಇಂದು ಕಾಂಗ್ರೆಸ್ ಸೇರಲಿದ್ದಾರೆ. ಖೇಣಿ ಸೇರ್ಪಡೆಗೆ ಪಕ್ಷದ ಯಾವ ಶಾಸಕರು ವಿರೋಧ ವ್ಯಕ್ತಪಡಿಸಿಲ್ಲ. ಊಹಾ ಪೋಹಗಳಿಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಾರ್ಚ್ 21ರಿಂದ 25ರವರೆಗೆ ಮೈಸೂರು ಭಾಗದಲ್ಲಿ ಪ್ರವಾಸ ಮಾಡಲಿದ್ದಾರೆ. ಮಾರ್ಚ್ 25 ರಂದು ಮೈಸೂರಿನಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ ಎಂದರು.