ಬೆಂಗಳೂರು: ‘ರಾಜ್ಯ ಹೈಕೋರ್ಟ್ ಸಿಬ್ಬಂದಿಗೆ ಕೇಂದ್ರ ಸರ್ಕಾರಿ ನೌಕರರ ತತ್ಸಮಾನ ವೇತನ ನೀಡಲು ರಾಜ್ಯ ಸರ್ಕಾರ ಸಮ್ಮತಿಸಿದೆ’ ಎಂದು ಅಡ್ವೊಕೇಟ್ ಜನರಲ್ ಎಂ.ಆರ್. ನಾಯಕ್ ಹೈಕೋರ್ಟ್ಗೆ ತಿಳಿಸಿದ್ದಾರೆ.
ಈ ಕುರಿತ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಸ್. ಪಾಟೀಲ, ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿದ ವೇಳೆ ನಾಯಕ್ ಈ ಮಾಹಿತಿ ನೀಡಿದರು.
ವಿಚಾರಣೆ ವೇಳೆ ಹಾಜರಿದ್ದ ರಿಜಿಸ್ಟ್ರಾರ್ ಜನರಲ್, ‘ಶ್ರೇಣಿವಾರು ವೇತನ ಹೆಚ್ಚಳ ನಿಗದಿಯ ಫಿಟ್ಮೆಂಟ್ ಮಾಡಲಾಗಿದೆ. ಈ ದಿಸೆಯಲ್ಲಿ ನ್ಯಾಯಾಲಯದ ವೇತನ ನಿಗದಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಅದು ರಾಜ್ಯಪತ್ರದಲ್ಲಿ ಪ್ರಕಟವಾಗಬೇಕಿದೆ. ಈ ದಿಸೆಯಲ್ಲಿನ ಪ್ರಕ್ರಿಯೆ ಚಾಲ್ತಿಯಲ್ಲಿದೆ’ ಎಂದರು.
‘ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಬ್ಬಂದಿಯ ವೈಯಕ್ತಿಕ ವೇತನ ಪರಿಷ್ಕರಣೆ ನಿಗದಿ ಪಡಿಸಲಾಗುವುದು. ಅದಕ್ಕೆ ಕಾಲಾವಕಾಶ ಬೇಕು’ ಎಂದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಿದೆ.
‘ಹೈಕೋರ್ಟ್ ನೌಕರರ ವೇತನ ಪರಿಷ್ಕರಣೆಗೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲನೆಗೆ ಸರ್ಕಾರ ವಿಳಂಬ ಮಾಡುತ್ತಿದೆ’ ಎಂದು ಆರೋಪಿಸಿ ನಿಜಗುಣಿ ಎಂ. ಕರಡಿಗುಡ್ಡ ಮತ್ತು ಕರ್ನಾಟಕ ಹೈಕೋರ್ಟ್ ನೌಕರರ ಕಲ್ಯಾಣ ಸಂಘ ಸಲ್ಲಿಸಿರುವ ಸಿವಿಲ್ ನ್ಯಾಯಾಂಗ ನಿಂದನಾ
ಅರ್ಜಿ ಇದಾಗಿದೆ.