ಬೆಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ ಟೀಕಿಸಿದರು.
ಜೆಡಿಎಸ್ ನಗರದ ಘಟಕದ ವತಿಯಿಂದ ಹಮ್ಮಿಕೊಂಡಿರುವ ಒಂದು ತಿಂಗಳ ವಿಕಾಸಪರ್ವ ಪಾದಯಾತ್ರೆಗೆ ಚಾಲನೆ ನೀಡಿದ ಅವರು, ಸಾರ್ವಜನಿಕರು ಪೊಲೀಸ್ ಠಾಣೆಗೆ ದೂರು ನೀಡಲು ಹೋದರೂ ಕೇಳುವವರೇ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದರು.
ರೌಡಿಗಳು, ಸರಗಳ್ಳರು, ಪುಡಾರಿಗಳ ಹಾವಳಿ ಹೆಚ್ಚಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಜನರಿಗೆ ರಕ್ಷಣೆಯೇ ಇಲ್ಲ. ಹಿಂದೆ ಜೆಡಿಎಸ್ ಅಧಿಕಾರದಲ್ಲಿ ಇದ್ದಾಗ ಬೆಂಗಳೂರಿನಲ್ಲಿ ಇಂತಹ ದುಸ್ಥಿತಿ ಇರಲಿಲ್ಲ ಎಂದು ಅವರು ಹೇಳಿದರು.
‘ನಾವು ಅಧಿಕಾರದಲ್ಲಿದ್ದಾಗ ಬೆಂಗಳೂರು ನಗರಕ್ಕೆ ಹಲವು ವಿಶಿಷ್ಟ ಯೋಜನೆಗಳನ್ನು ಜಾರಿ ಮಾಡಿದ್ದೆವು. ಬಿಎಂಟಿಸಿ ರಚನೆ ಮಾಡಿ, ಸ್ಯಾಟಲೈಟ್ ಬಸ್ ನಿಲ್ದಾಣಗಳ ಕಲ್ಪನೆಗಳನ್ನು ಜಾರಿಗೆ ತಂದವರು ನಾವೇ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಧಿಕಾರ ನೋಡಿದ್ದೀರಿ. ಅವರು ಯಾವುದೇ ಕೆಲಸ ಮಾಡಿಲ್ಲ. ಈ ಬಾರಿ ನಮಗೆ ಅವಕಾಶ ನೀಡಿ’ ಎಂದು ಮನವಿ ಮಾಡಿದರು.
ಬೆಂಗಳೂರು ನಗರದ ಎಲ್ಲ ಕ್ಷೇತ್ರಗಳಲ್ಲೂ ಪಾದಯಾತ್ರೆ ನಡೆಸಲಾಗುವುದು. ಪಕ್ಷ ಈ ಹಿಂದೆ ಮಾಡಿರುವ ಮತ್ತು ಮುಂದೆ ಮಾಡಲಿರುವ ಕಾರ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಗುವುದು ಎಂದೂ ಅವರು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಮಾತನಾಡಿ, ಬೆಂಗಳೂರು ನಗರವನ್ನು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದವರಿಂದ ರಕ್ಷಿಸುವ ಉದ್ದೇಶದಿಂದಲೇ ಪಾದಯಾತ್ರೆ ನಡೆಸುತ್ತಿದ್ದೇವೆ. ಈ ಎರಡೂ ಪಕ್ಷಗಳಿಂದ ನಗರದಲ್ಲಿ ಲೂಟಿ ಆಗಿದೆಯೇ ಹೊರತು, ಅಭಿವೃದ್ಧಿ ಆಗಿಲ್ಲ ಎಂದರು.