ಹೈದರಾಬಾದ್: ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ಸೇತರ ‘ಒಕ್ಕೂಟ ರಂಗ’ಕ್ಕೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಏಪ್ರಿಲ್ 27ರಂದು ಚಾಲನೆ ನೀಡುವ ಸಾಧ್ಯತೆ ಇದೆ. ಅಂದು ಅವರ ಪಕ್ಷ ತೆಲಂಗಾಣ ರಾಷ್ಟ್ರ ಸಮಿತಿಯ (ಟಿಆರ್ಎಸ್) ಸ್ಥಾಪನಾ ದಿನ.
ರಾಷ್ಟ್ರ ರಾಜಕಾರಣದಲ್ಲಿ ‘ಗುಣಾತ್ಮಕ ಬದಲಾವಣೆ’ ತರುವುದಕ್ಕಾಗಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಿದ್ಧ. ಇಂತಹುದೊಂದು ವೇದಿಕೆ ನಿರ್ಮಾಣಕ್ಕಾಗಿ ಸಮಾನಮನಸ್ಕ ಪಕ್ಷಗಳ ಜತೆ ಮಾತುಕತೆ ನಡೆಸುತ್ತಿರುವುದಾಗಿ ಕೆಸಿಆರ್ ಕಳೆದ ವಾರ ಹೇಳಿದ್ದರು.
ಏಪ್ರಿಲ್ 27ರಂದೇ ಈ ರಂಗಕ್ಕೆ ಚಾಲನೆ ದೊರೆಯಲಿದೆ. ವಿವಿಧ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಲು ಕೆಸಿಆರ್ ಪ್ರಯತ್ನಿಸುತ್ತಿದ್ದಾರೆ. ಕಾರ್ಯಕ್ರಮ ಹೈದರಾಬಾದ್ನಲ್ಲಿಯೇ ನಡೆಯಲಿದೆ ಎಂದು ಟಿಆರ್ಎಸ್ ಮುಖಂಡರೊಬ್ಬರು ಹೇಳಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ಅಖಿಲೇಶ್ ಯಾದವ್ ನೇತೃತ್ವದ ಎಸ್ಪಿ ಮತ್ತು ಮಾಯಾವತಿ ನೇತೃತ್ವದ ಬಿಎಸ್ಪಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿವೆಯೇ ಎಂಬ ಪ್ರಶ್ನೆಗೆ ಟಿಆರ್ಎಸ್ ಮೂಲಗಳು ಪ್ರತಿಕ್ರಿಯೆ ನೀಡಿಲ್ಲ.
ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಕಾಂಗ್ರೆಸ್ ನಡೆಸುತ್ತಿರುವ ಪ್ರಯತ್ನಕ್ಕೆ ಪ್ರತಿಯಾಗಿ ಕೆಸಿಆರ್ ಈ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂಬುದನ್ನು ಲೋಕಸಭೆಯಲ್ಲಿ ಟಿಆರ್ಎಸ್ ನಾಯಕ ಜಿತೇಂದರ್ ರೆಡ್ಡಿ ಅಲ್ಲಗಳೆದಿದ್ದಾರೆ. ಆದರೆ, ಬಿಜೆಪಿ ಮತ್ತು ಕಾಂಗ್ರೆಸ್ ಬಗ್ಗೆ ಜನರು ಭ್ರಮನಿರಸನಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ, ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ ಸೊರೇನ್ ಅವರು ಒಕ್ಕೂಟ ರಂಗದ ಪ್ರಸ್ತಾವಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ಟಿಆರ್ಎಸ್ ದೃಢವಾಗಿ ಹೇಳಿಕೊಂಡಿದೆ.
*
ಸರಿಯಾದ ಸಮಯಕ್ಕೆ ಸೂಕ್ತ ನಿರ್ಧಾರ: ಚಂದ್ರಬಾಬು ನಾಯ್ಡು
ಅಮರಾವತಿ: ಕೇಂದ್ರದ ಆಡಳಿತಾರೂಢ ಎನ್ಡಿಎ ಮೈತ್ರಿಕೂಟದಿಂದ ತೆಲುಗು ದೇಶಂ (ಟಿಡಿಪಿ) ಹೊರಬರುವುದಕ್ಕೆ ಸಂಬಂಧಿಸಿ ‘ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಆಂಧ್ರಪ್ರದೇಶ ಪುನರ್ಸಂಘಟನೆ ಕಾಯ್ದೆ 2014 ಮತ್ತು ಲೋಕಸಭೆಯಲ್ಲಿ ನೀಡಿದ ಭರವಸೆಗಳನ್ನು ನಿರ್ಲಐಕ್ಷಿಸುವ ಮೂಲಕ ರಾಜ್ಯದ ಜನರ ಭಾವನೆಗಳನ್ನು ಕೇಂದ್ರ ಸರ್ಕಾರ ಅವಮಾನಿಸುತ್ತಿದೆ ಎಂದು ನಾಯ್ಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ರಾಜ್ಯದ ಹಿತಾಸಕ್ತಿ ಸಂರಕ್ಷಿಸುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಏನೇ ಕಷ್ಟ ಬಂದರೂ ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರವನ್ನೇ ತೆಗೆದುಕೊಳ್ಳಲಾಗುವುದು’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.