ರಾಯಚೂರು: 'ಹಿಂದುಗಳ ಮೇಲೆ ಬಿಜೆಪಿಯಿಂದ ಹೆಚ್ಚು ಅನ್ಯಾಯವಾಗಿದೆ. 2008 ರಿಂದ 2013, ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ ಹಿಂದು ಯುವಕರ ಮೇಲೆ ಅತಿಹೆಚ್ಚು ಪ್ರಕರಣಗಳು ದಾಖಲಾಗಿವೆ' ಎಂದು ಶಿವಸೇನೆ ರಾಜ್ಯ ಘಟಕದ ಅಧ್ಯಕ್ಷ ಆಂದೋಲಾ ಮಠದ ಸಿದ್ಧಲಿಂಗ ಸ್ವಾಮೀಜಿ ಆರೋಪಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 224 ಕ್ಷೇತ್ರಗಳಲ್ಲಿ ಶಿವಸೇನೆ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಬಾಲಿವುಡ್ ನಟ, ನಟಿಯರು ಬರಲಿದ್ದಾರೆ ಎಂದರು.
ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಹಿಂದುಗಳ ಮೇಲಿನ ಪ್ರಕರಣ ಕೈ ಬಿಡುವುದಾಗಿ ಹೇಳಿದ್ದಾರೆ. ಅಧಿಕಾರ ಇದ್ದಾಗ ಈ ಕಾಳಜಿ ಅವರಿಗೆ ಇರಲಿಲ್ಲ. ಬೇರೆ ಎಲ್ಲಾ ಪಕ್ಷಗಳಿಗಿಂತ ಬಿಜೆಪಿ ಅಧಿಕಾರವಧಿಯಲ್ಲಿ ಹಿಂದುಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳಿಗೂ ಚುನಾವಣೆಯಲ್ಲಿ ಜನರು ಪಾಠ ಕಲಿಸುತ್ತಾರೆ ಎಂದರು.