ದಾವಣಗೆರೆ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮತದಾನದ ಕುರಿತು ಅರಿವು ಮೂಡಿಸುವ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಶುಕ್ರವಾರ ನಗರದ ಆಫೀಸರ್ಸ್ ಕ್ಲಬ್ನಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಅಶ್ವತಿ, ಸ್ವತಃ ರಕ್ತದಾನ ಮಾಡಿದರು. ಉಪ ಕಾರ್ಯದರ್ಶಿ ಜಿ.ಎಸ್. ಷಡಕ್ಷರಪ್ಪ ಸೇರಿದಂತೆ ಗ್ರಾಮ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿ ರಕ್ತದಾನ ಮಾಡಿದರು.
ಈ ಸಂದರ್ಭದಲ್ಲಿ ಸಿಇಒ ಮಾತನಾಡಿ, ‘ಮೊದಲ ಬಾರಿಗೆ ರಕ್ತದಾನ ಮಾಡುತ್ತಿದ್ದೇನೆ. ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ರಕ್ತದಾನ ಮಾಡುತ್ತಿರುವುದು ಹೆಮ್ಮೆ ತಂದಿದೆ. ಜತೆಗೆ ಅಧಿಕಾರಿಗಳು ಉತ್ಸಾಹದಿಂದ ರಕ್ತದಾನ ಮಾಡಿರುವುದು ಶ್ಲಾಘನೀಯ. ರಕ್ತದಾನ ಶಿಬಿರಗಳು ನಿರಂತರವಾಗಿ ನಡೆಯಲಿ’ ಎಂದರು.
ಶಿಬಿರದಲ್ಲಿ 131 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಡಿಎಚ್ಒ ಡಾ.ತ್ರಿಪುಲಾಂಬ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕಿ ಡಾ. ನೀಲಾಂಬಿಕೆ, ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ಬಸನಗೌಡ, ಸಹಾಯಕ ಯೋಜನಾ ನಿರ್ದೇಶಕ ಶಶಿಧರ್, ಡಾ. ನಂದಾ, ಅಧಿಕಾರಿಗಳು ಇದ್ದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಕ್ತನಿಧಿ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.