ಕಾರವಾರ: ವಿಧಾನಸಭಾ ಚುನಾವಣೆಯ ಅಂಗವಾಗಿ ಜಿಲ್ಲೆಯ ಅಂಗವಿಕಲರಿಗೆ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಇದೇ 7ರಿಂದ ಅಂಗವಿಕಲರ ಸಮೀಕ್ಷೆ ಕಾರ್ಯ ಆರಂಭವಾಗಿದ್ದು, ಇದೇ 12ರ ವರೆಗೆ ನಡೆಯಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ಮತದಾನಕ್ಕೆ ಅರ್ಹರಿರುವ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿನ ಅಂಗವಿಕಲರನ್ನು ಗುರುತಿಸಿ, ಅವರಿಗೆ ಮತದಾನದ ಅರಿವು ಮೂಡಿಸಲು ಈ ಸಮೀಕ್ಷೆ ಕೈಗೊಳ್ಳಲಾಗಿದೆ.
‘ಸಮೀಕ್ಷೆಯ ಬಳಿಕ ಇದೇ 13ರಿಂದ 15ರ ವರೆಗೆ ಸಂಗ್ರಹಿಸಿದ ಮಾಹಿತಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಲಾಗುತ್ತದೆ. ತದನಂತರ ಇದೇ 20ರಂದು ಆಯಾ ತಾಲ್ಲೂಕಿನ ತಹಶೀಲ್ದಾರರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಅವರಿಗೆ ಮತದಾನದ ಜಾಗೃತಿ ಮೂಡಿಸಲಾಗುವುದು’ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.