ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಸಮ್ಮತ ಚುನಾವಣೆಗೆ ಕ್ರಮ

ಸಿದ್ಧತಾ ಸಭೆಯಲ್ಲಿ ಚುನಾವಣಾ ಆಯೋಗದ ಕಾರ್ಯದರ್ಶಿ ಮಲಾಯ್ ಮಲಿಕ್
Last Updated 14 ಮಾರ್ಚ್ 2018, 9:18 IST
ಅಕ್ಷರ ಗಾತ್ರ

ಶಿವಮೊಗ್ಗ: ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಚುನಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ. ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಕಾರ್ಯದರ್ಶಿ ಮಲಾಯ್ ಮಲಿಕ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣೆಯ ಮೊದಲ ಹಂತದ ತಯಾರಿ ನಡೆದಿದ್ದು, ಮತದಾನ ಕೇಂದ್ರಗಳಲ್ಲಿ ನೀರು, ನೆರಳು, ವಿದ್ಯುತ್, ಶೌಚಾಲಯ ಮುಂತಾದ ಮೂಲಸೌಕರ್ಯಗಳನ್ನು ಒದಗಿಸಬೇಕು. ಮತಗಟ್ಟೆಯಲ್ಲಿ ಸೌಲಭ್ಯಗಳಿರುವ ಬಗ್ಗೆ ಖುದ್ದಾಗಿ ಭೇಟಿ ನೀಡಿ, ಖಾತ್ರಿಪಡಿಸಿಕೊಳ್ಳಲಾಗುತ್ತಿದೆ ಎಂದರು.

ಜಿಲ್ಲಾ ಚುನಾವಣಾ ಶಾಖೆಯಿಂದ ಬಿಡುಗಡೆಗೊಳಿಸಲಾದ ಮತದಾರರ ಪಟ್ಟಿ, ಮತಗಟ್ಟೆಗಳು, ಮತಯಂತ್ರಗಳು, ವಿವಿಪ್ಯಾಟ್‌ಗಳ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರಿಂದ ಅಹವಾಲುಗಳನ್ನು, ಸಲಹೆ-ಸೂಚನೆಗಳನ್ನು ಆಲಿಸಲಾಗುತ್ತದೆ ಎಂದರು.

ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಮಾತನಾಡಿ, ‘ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಾಮೂಹಿಕವಾಗಿ ಮತಯಂತ್ರಗಳು, ವಿವಿಪ್ಯಾಟ್‌ಗಳನ್ನು ಆರಿಸಿ, ಪರೀಕ್ಷಿಸಿ ತೋರಿಸಲಾಗುವುದು. ಅಲ್ಲದೇ ಅವುಗಳನ್ನು ಸಾರ್ವಜನಿಕರ ಪ್ರಾತ್ಯಕ್ಷಿಕೆಗೆ ಬಳಸಲಾಗುವುದು. ಮತಯಂತ್ರಗಳ ಮಾದರಿ, ವಿವಿಪ್ಯಾಟ್‌ಗಳ ಕುರಿತ ವಿವರವಾದ ಮಾಹಿತಿಯನ್ನು ರಾಜಕೀಯ ಪಕ್ಷಗಳ ಮುಖಂಡರಿಗೆ ಒದಗಿಸಲಾಗುವುದು. ಚುನಾವಣೆಗೆ ಸಂಬಂಧಿಸಿದ ಪ್ರತಿ ಹಂತದ ಚಟುವಟಿಕೆಗಳನ್ನೂ ಪರಿಶೀಲಿಸಿ, ಖಾತ್ರಿಪಡಿಸಿಕೊಳ್ಳಬಹುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಕೆ.ರಾಕೇಶ್‌ ಕುಮಾರ್‌ ಮಾತನಾಡಿ, ‘ಮತದಾನ ಪ್ರಮಾಣ ಹೆಚ್ಚಿಸಲು ವ್ಯವಸ್ಥಿತವಾಗಿ ಅರಿವು ಮೂಡಿಸುವ ಕಾರ್ಯಗಳನ್ನು ನಡೆಸಲಾಗುತ್ತಿದೆ. ಚುನಾವಣೆಯ ಮಹತ್ವದ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸಲಾಗುತ್ತಿದೆ. ಕಳೆದ ಚುನಾವಣೆಗಿಂತ ಹೆಚ್ಚಿನ ಸಂಖ್ಯೆಯ ಮತದಾರರು ಚುನಾವಣೆತಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ’ ಎಂದರು.

ಸಭೆಯಲ್ಲಿ ಚುನಾವಣಾ ಆಯೋಗದ ಲೆಕ್ಕ ಪರಿಶೀಲನಾ ತಂಡದ ಸದಸ್ಯ ಅನೂಪ್‌ಕುಮಾರ್ ಕಕ್ಲಾರಿ, ಪಾಲಿಕೆ ಆಯುಕ್ತ ಮುಲೈ ಮುಹಿಲನ್, ಹೆಚ್ಚುವರಿ  ಜಿಲ್ಲಾಧಿಕಾರಿ ಚನ್ನಬಸಪ್ಪ, ಸಾಗರ ಉಪವಿಭಾಗಾಧಿಕಾರಿ ನಾಗರಾಜ ಸಿಂಗ್ರೇರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT