ಮುಂಬೈ: ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ, ಪತ್ರಕರ್ತ ಕುಮಾರ್ ಕೇತ್ಕರ್ ಸೇರಿ ಆರು ಜನರು ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾಲ್ಕನೇ ಅಭ್ಯರ್ಥಿಯಾಗಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಮಹಾರಾಷ್ಟ್ರ ರಾಜ್ಯ ಮಹಿಳಾ ಹಕ್ಕುಗಳ ಆಯೋಗದ ಅಧ್ಯಕ್ಷೆ ಡಾ. ವಿಜಯಾ ರಾಹತ್ಕರ್ ಅವರು ತಮ್ಮ ನಾಮಪತ್ರ ವಾಪಸ್ ಪಡೆದಿದ್ದರು.
ಕೇಂದ್ರ ಮಾನವ ಸಂಪನ್ಮೂಲ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಕೇರಳದ ಹಿರಿಯ ಬಿಜೆಪಿ ಮುಖಂಡ ವಿ. ಮುರಳೀಧರನ್ ಅವರೂ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ತೊರೆದು ಮಹಾರಾಷ್ಟ್ರ ಸ್ವಾಭಿಮಾನ ಪಕ್ಷ ಸ್ಥಾಪಿಸಿದ್ದ ರಾಣೆ, ಬಿಜೆಪಿ ಟಿಕೆಟ್ನಿಂದ ಆಯ್ಕೆಯಾಗಿದ್ದಾರೆ. ಮುಂಬೈ ಪ್ರೆಸ್ ಕ್ಲಬ್ ಅಧ್ಯಕ್ಷರೂ ಆಗಿರುವ ಕೇತ್ಕರ್, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.
ಕುಮಾರ್ ಕೇತ್ಕರ್
ಇನ್ನು ಎನ್ಸಿಪಿಯಿಂದ ಸ್ಪರ್ಧಿಸಿದ್ದ ಪುಣೆ ಮಾಜಿ ಮೇಯರ್ ವಂದನಾ ಚವಾಣ್, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಆಪ್ತ ಅನಿಲ್ ದೇಸಾಯಿ ಕೂಡಾ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.
ರಾಣೆ ಅವರು ರಾಜ್ಯ ರಾಜಕಾರಣದಲ್ಲಿ ಇರುವ ಇಚ್ಛೆ ವ್ಯಕ್ತಪಡಿಸಿದ್ದರು. ಆದರೆ ಶಿವಸೇನೆಯಿಂದ ವಿರೋಧ ವ್ಯಕ್ತವಾಗಿದ್ದರಿಂದ ಮುಖ್ಯಮಂತ್ರಿ ಫಡಣವೀಸ್, ಇವರಿಗೆ ರಾಜ್ಯಸಭೆಗೆ ಸ್ಪರ್ಧಿಸುವಂತೆ ಆಹ್ವಾನ ನೀಡಿದ್ದರು.
ಜಾವಡೇಕರ್ ಅವರು ಕಳೆದ ಬಾರಿ ಮಧ್ಯಪ್ರದೇಶದಿಂದ ಆಯ್ಕೆಯಾಗಿದ್ದರು. ಈ ಬಾರಿ ಅವರು ತಮ್ಮ ತವರು ರಾಜ್ಯದಿಂದ ರಾಜ್ಯಸಭೆಗೆ ಪ್ರವೇಶ ಪಡೆದಿದ್ದಾರೆ.