ಮಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೇಂದ್ರದಲ್ಲಿ ಮೀನುಗಾರಿಕಾ ಸಚಿವಾಲಯ ಆರಂಭಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದರು.
ನಗರದ ಸುರತ್ಕಲ್ನಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಅಧಿಕಾರಕ್ಕೆ ಬಂದಾಗ ತಾನು ದೇಶದ ಪ್ರಧಾನ ಕಾವಲುಗಾರ ಎಂದು ಮೋದಿ ಹೇಳಿದ್ದರು. ಇದೀಗ ಉದ್ಯಮಿಗಳಾದ ನೀರವ್ ಮೋದಿ, ವಿಜಯ್ ಮಲ್ಯ ಬ್ಯಾಂಕ್ಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ಪರಾರಿಯಾಗಿರುವುದು ನೋಡಿದರೆ ಮೋದಿಯೇ ಅನುವು ಮಾಡಿಕೊಟ್ಟರೋ ಎಂಬ ಅನುಮಾನ ಮೂಡುತ್ತಿದೆ ಎಂದು ರಾಹುಲ್ ಹೇಳಿದರು.
‘15 ಉದ್ಯಮಿಗಳ 2.5 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಲಾಗಿದೆ. ಆದರೆ, ರೈತರ ಸಾಲ ಮನ್ನಾ ಮಾಡಿಲ್ಲ. ಈ ಕುರಿತು ಪ್ರಧಾನಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದೆ. ಆದರೂ ಪರಿಣಾಮವಾಗಿಲ್ಲ’ ಎಂದು ರಾಹುಲ್ ಹೇಳಿದರು.