ಗಂಗಾವತಿ: ತುಂಗಭದ್ರಾ ಎಡದಂಡೆ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಬೆಳೆದ ಭತ್ತದ ಬೆಳೆಗೆ ನೀರಿನ ಅಗತ್ಯವಿದ್ದು, ಕೂಡಲೆ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ನಗರದ ಸಿಬಿಎಸ್ ವೃತ್ತದಲ್ಲಿ ಮಂಗಳವಾರ ಧರಣಿ ನಡೆಸಿದರು.
ಮಾಜಿ ಶಾಸಕ ಎಚ್.ಆರ್. ಶ್ರೀನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು, ನಾಲೆಗೆ ನೀರು ಹರಿಸಬೇಕು. ಇಲ್ಲದಿದ್ದರೆ ಎಕರೆಗೆ ₹30 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಶ್ರೀನಾಥ್ ಮಾತನಾಡಿ, ಸಿಎಂ ಸಿದ್ದರಾಮಯ್ಯ ಈ ಭಾಗದ ರೈತರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ರಾಯಚೂರು, ಬಳ್ಳಾರಿ, ಕೊಪ್ಪಳ ಜಿಲ್ಲೆಗೆ ಹಲವು ಬಾರಿ ಭೇಟಿ ನೀಡಿದ್ದಾರೆ. ಆದರೆ, ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ ಎಂದು ದೂರಿದರು.
ಕಂದಾಯ ಇಲಾಖೆ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಪಿ.ಅಕ್ತರ್ ಸಾಬ್ ಮಾತನಾಡಿದರು. ಅಮರೇಗೌಡ ಪಾಟೀಲ, ಮಂಜುಳಾ ಡಿ.ಎಂ.ರವಿ, ಶಾಕೀರಾ ಸಬ್ಬೀರ್, ಯು.ಲಕ್ಷಣ, ಶಾಹೀನ್ ಕೌಸರ್, ನಿಧಿ ಚಕ್ರವರ್ತಿ, ವಿ.ಬಿ.ಬುಲಟ್ ಗೌಡ ಇದ್ದರು.