ರಾಣೆಬೆನ್ನೂರು: ‘ಪದವಿ ಹಂತದ ಶಿಕ್ಷಣದಲ್ಲಿ ಸಾಧನೆ ಮಾಡಲು ಹೆಚ್ಚು ಅವಕಾಶಗಳಿವೆ. ವಿದ್ಯಾರ್ಥಿಗಳು ಅವುಗಳನ್ನು ಸಮರ್ಥವಾಗಿ ಸದ್ಬಳಕೆ ಮಾಡಿ ಕೊಂಡು, ಉನ್ನತ ಮಟ್ಟದಲ್ಲಿ ಸಾಧನೆ ಮಾಡಬೇಕು’ ಎಂದು ಸಂಸ್ಥೆಯ ಆಡಳಿತಾಧಿಕಾರಿ ಡಾ. ಆರ್.ಎಂ.ಕುಬೇರಪ್ಪ ಹೇಳಿದರು.
ನಗರದ ಹಲಗೇರಿ ರಸ್ತೆಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಈಚೆಗೆ ನಡೆದ ‘ವಿದ್ಯಾರ್ಥಿ ಒಕ್ಕೂಟ, ಎನ್ಎಸ್ಎಸ್ ಚಟುವಟಿಕೆ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಮಾರೋಪ, ಪ್ರತಿಭಾ ಪುರಸ್ಕಾರ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ’ದಲ್ಲಿ ಅವರು ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಧರ ಎನ್. ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ಜೀವನದ ಯಶಸ್ಸಿಗಾಗಿ ಉತ್ತಮ ಕನಸುಗಳನ್ನು ಕಾಣಬೇಕು. ಓದು ಬರಹದ ಜೊತೆಗೆ ಒಳ್ಳೆಯ ಚಟುವಟಿಕೆಗಳಲ್ಲಿ ಭಾಗವಹಿಸಬೇಕು’ ಎಂದು ಸಲಹೆ ನೀಡಿದರು.