ಸೇಲಂ: ಮಾರ್ಚ್ 29ರ ಒಳಗೆ ಕೇಂದ್ರ ಸರ್ಕಾರ ‘ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ’ ಸ್ಥಾಪನೆ ಮಾಡಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಂತರ ರಾಜ್ಯ ನದಿ ನೀರು ಹಂಚಿಕೆ ವಿಚಾರವಾಗಿ ಫೆ.16ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದಾಗಿ ತಮಿಳುನಾಡಿಗೆ ಅನ್ಯಾಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, ಹೋರಾಟಕ್ಕೆ ಮುಂದಾಗಿದ್ದಾರೆ.
ತೀರ್ಪು ಹೊರಬಂದ 6 ವಾರಗಳ ಒಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ತಮಿಳುನಾಡು ಪಟ್ಟುಹಿಡಿದಿದೆ.
ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ (ಸಿಎಂಬಿ) ಹಾಗೂ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್ಸಿ) ಸ್ಥಾಪಿಸಬೇಕೆಂದು ಎಐಎಡಿಎಂಕೆ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲೂ ಘೋಷಣೆ ಕೂಗಿ ಗದ್ದಲವನ್ನುಂಟು ಮಾಡಿದರು.
ಕಾನೂನು ತಜ್ಞರ ಸಮಿತಿಯನ್ನು ಪಳನಿಸ್ವಾಮಿ ಸಂರ್ಪಕಿಸಿದ್ದು, ನಿರ್ವಹಣಾ ಮಂಡಳಿ ಸ್ಥಾಪನೆ ಸಂಬಂಧ ಕೋರ್ಟ್ ಮೋರೆ ಹೋಗಲು ಚರ್ಚಿಸಿದ್ದಾರೆ ಎನ್ನಲಾಗಿದೆ.
ಡಿಎಂಕೆ ಸಭೆ: ಕಾವೇರಿ ನದಿ ವಿವಾದ ಕುರಿತು ಚರ್ಚಿಸಲು ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ನೇತೃತ್ವದಲ್ಲಿ ಇದೇ 30ರಂದು ಕಾರ್ಯಕಾರಿ ಮಂಡಳಿ ಸಭೆ ಕರೆಯಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಕೆ.ಅನ್ಬುಗನ್ ಅವರು ತಿಳಿಸಿದ್ದಾರೆ.
ಮಾರ್ಚ್ 31ರೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚಿಸದೇ ಇದ್ದರೆ ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.