ಬೀದರ್: ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಸೋಮವಾರ ನಗರದ ಪುರಾತನ ಭೂಕಾಲುವೆಗೆ ಭೇಟಿ ನೀಡಿದರು. ಭೂಕಾಲುವೆ ಕಾಮಗಾರಿಗೆ ಸಂಬಂಧಿಸಿದ ಅಂದಾಜು ಪಟ್ಟಿ ಮತ್ತು ಛಾಯಾಚಿತ್ರಗಳನ್ನು ಪರಿಶೀಲಿಸಿದರು.
‘₹3 ಕೋಟಿ ವೆಚ್ಚದ ಅಂದಾಜು ಪಟ್ಟಿ ಪಡೆದು ಈಗಾಗಲೇ ಎರಡು ಬಾರಿ ಟೆಂಡರ್ ಕರೆಯಲಾಗಿದೆ. ಆದರೆ, ಯಾವುದೇ ಅರ್ಜಿಗಳು ಬಂದಿಲ್ಲ. ಈ ಬಗೆಗೆ ನಿರ್ದೇಶನ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ’ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.
‘ಭೂಕಾಲುವೆ ಕಾಮಗಾರಿ ಪೂರ್ಣಗೊಂಡರೆ ನೀರಿನ ಅನುಕೂಲವಾಗಲಿದೆ. ಭೂಕಾಲುವೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಸುತ್ತಮುತ್ತಲಿನ ಪ್ರದೇಶವನ್ನು ಕಾಪಾಡಬೇಕು’ ಎಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ರಹೀಂಖಾನ್ ಸೂಚನೆ ನೀಡಿದರು.
ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಜಯ ಜಾಗೀರದಾರ್ ಇದ್ದರು. ಸಚಿವ ಪ್ರಿಯಾಂಕ್ ಖರ್ಗೆ ಅವರು ವಸಂತ ನಗರದ ಚರ್ಚ್ಗೂ ಭೇಟಿ ನೀಡಿದರು.