ಮೈಸೂರು: ನೂತನ ರಾಯಚೂರು ವಿಶ್ವವಿದ್ಯಾಲಯದ ವಿಶೇಷಾಧಿಕಾರಿಯಾಗಿ ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಮುಜಾಫರ್ ಅಸ್ಸಾದಿ ನೇಮಕವಾಗಿದ್ದಾರೆ.
ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಗುಲ್ಬರ್ಗಾ ವಿಶ್ವವಿದ್ಯಾಲಯವನ್ನು ವಿಭಜಿಸಿ ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ರಾಜ್ಯ ಸರ್ಕಾರವು ಮುಂದಾಗಿದೆ. ಇದಕ್ಕಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗದ ಮಾನದಂಡಗಳ ಅನ್ವಯದಂತೆ ಪೂರ್ಣಪ್ರಮಾಣದ ರಾಯಚೂರು ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗಿದೆ.
ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಸರ್ಕಾರದ ನಡುವೆ ಸಮನ್ವಯತೆ ಸಾಧಿಸಲು ಅನುಕೂಲವಾಗುವಂತೆ ಪ್ರೊ.ಅಸ್ಸಾದಿ ಅವರನ್ನು ವಿಶೇಷಾಧಿಕಾರಿಯನ್ನಾಗಿ ನೇಮಿಸಿ, ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಪ್ರೊ.ಅಸ್ಸಾದಿ, ‘ವಿ.ವಿ.ಯನ್ನು ಕಟ್ಟಿ ಬೆಳೆಸುವ ಮಹತ್ತರ ಜವಾಬ್ದಾರಿ ನನಗೆ ಸಿಕ್ಕಿದೆ. ಶೈಕ್ಷಣಿಕವಾಗಿ ಉತ್ಕೃಷ್ಟ ಸಾಧನೆಯನ್ನು ಮಾಡುವ ಸಂಸ್ಥೆಯನ್ನು ಕಟ್ಟುವೆ’ ಎಂದರು.