ಬೆಂಗಳೂರು: ಬಸವೇಶ್ವರ ನಗರದ ಮನೆಯೊಂದರಲ್ಲಿ ನಿವೃತ್ತ ತಹಶೀಲ್ದಾರ್ ನಾಗರತ್ನಮ್ಮ (63) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವಿವಾಹಿತರಾಗಿದ್ದ ಅವರು ಕಡಂಬಿ ಶಾಲೆ ಬಳಿ ಸ್ವಂತ ಮನೆಯಲ್ಲಿ ವಾಸವಿದ್ದರು. ಮನೆಯಿಂದ ಶನಿವಾರ ಸಂಜೆ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋದ ಪೊಲೀಸರು, ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ವಿಷಯ ಗೊತ್ತಾಗಿದೆ.
‘ನಾಗರತ್ನಮ್ಮ ಅವರ ಸಹೋದರರು ಪ್ರತ್ಯೇಕವಾಗಿ ವಾಸವಿದ್ದಾರೆ. ಒಬ್ಬಂಟಿ ವಾಸದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಅವರು, ಅದೇ ಕಾರಣಕ್ಕೆ ನೇಣು ಬಿಗಿದುಕೊಂಡಿರಬಹುದು ಎಂದು ಸಂಬಂಧಿಕರು ಹೇಳಿಕೆ ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.