ಗದಗ: ‘ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಶ್ರಮಿಸಿ, ನಿವೃತ್ತರಾದ ಪೊಲೀಸ್ ಸಿಬ್ಬಂದಿಗೆ ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ಭಾಗ್ಯ ಯೋಜನೆ ವಿಸ್ತರಿಸಬೇಕು’ ಎಂದು ನಿವೃತ್ತ ಎಆರ್ಎಸ್ಐ ಎಂ.ಎನ್.ಮಹೇಂದ್ರಕರ ಒತ್ತಾಯಿಸಿದರು.ಜಿಲ್ಲಾ ಪೊಲೀಸ್ ಇಲಾಖೆಯಿಂದ ಬೆಟಗೇರಿಯ ಜಿಲ್ಲಾ ಸಶಸ್ತ್ರ ಮೀಸಲುಪಡೆಯ ಕವಾಯತ್ ಮೈದಾನದಲ್ಲಿ ಸೋಮವಾರ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಹಬ್ಬ, ಹರಿದಿನಗಳಲ್ಲಿ ಪೊಲೀಸ್ ಸಿಬ್ಬಂದಿ ತಮ್ಮ ಕುಟುಂಬದ ಜತೆಗಿರದೇ ಸಮಾಜದ ಹಿತಕ್ಕಾಗಿ ಕೆಲಸ ಮಾಡುತ್ತಾರೆ. ನಿವೃತ್ತಿಯ ನಂತರ ಅವರಿಗೆ ಹಾಗೂ ಅವರ ಕುಟುಂಬಸ್ಥರಿಗೆ ಉತ್ತಮ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗದೆ ನೋವು ಪಡುತ್ತಾರೆ. ನಿವೃತ್ತ ನೌಕರರಿಗೆ ಆರೋಗ್ಯ ಭದ್ರತೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.