ಮಂಗಳೂರು: ಪತ್ರಿಕೆಯೊಂದರಲ್ಲಿ ಜಾಹೀರಾತು ಪ್ರಕಟಿಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ಸಚಿವ ಬಿ. ರಮಾನಾಥ ರೈ ವಿರುದ್ಧ ಬಂಟ್ವಾಳ ಕ್ಷೇತ್ರ ಬಿಜೆಪಿ ಘಟಕ ದೂರು ಸಲ್ಲಿಸಿದೆ.ಸಾರ್ವಜನಿಕ ಅನುದಾನದಿಂದ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳನ್ನು ಬಳಸಿ ಪತ್ರಿಕೆಯೊಂದರಲ್ಲಿ ಜಾಹೀರಾತು ಪ್ರಕಟಿಸಲಾಗಿದ್ದು, ಸಾರ್ವಜನಿಕ ಅನು ದಾನಗಳ ವಿವಿಧ ಶೀರ್ಷಿಕೆಗಳಡಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಸಾಧನೆ ಎಂದು ಸಚಿವ ಬಿ.ರಮಾನಾಥ ರೈ ಅವರು ಹೇಳಿಕೊಂಡಿದ್ದು, ಸರ್ಕಾರದ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ದೂರಿನಲ್ಲಿ ಆರೋಪಿಸಿದ್ದಾರೆ.ಚುನಾವಣಾಧಿಕಾರಿಗಳಿಗೆ ಲಿಖಿತ ದೂರು ನೀಡಿರುವ ಅವರು, ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಕಾನೂನು ಉಲ್ಲಂಘಿಸಿ ಸಾರ್ವಜನಿಕ ಅನುದಾನದ ಕಾಮಗಾರಿಗಳನ್ನು ತಾನು ಮಾಡಿರುವುದಾಗಿ ತಪ್ಪು ಅಭಿಪ್ರಾಯ ಮೂಡಿಸಿ ಮತದಾರರ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಎಚ್ಚರಿಕೆ ನೀಡುವಂತೆ ಆಗ್ರಹಿಸಿದ್ದಾರೆ.