ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ನೀತಿ ಸಂಹಿತೆ ಪಾಲನೆ ಕಡ್ಡಾಯ

ಮುದ್ರಕರು, ಕೇಬಲ್‍ ಆಪರೇಟರ್‌ಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ
Last Updated 5 ಏಪ್ರಿಲ್ 2018, 10:25 IST
ಅಕ್ಷರ ಗಾತ್ರ

ಕೊಪ್ಪಳ: 'ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಅವಧಿಯಲ್ಲಿ ಜಿಲ್ಲೆಯ ಎಲ್ಲ ಮುದ್ರಣಕಾರರು, ಕೇಬಲ್ ಆಪರೇಟರ್‌ಗಳು ಹಾಗೂ ರಾಜಕೀಯ ಪಕ್ಷಗಳು ಚುನಾವಣಾ ಆಯೋಗ ನೀಡಿರುವ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಬೇಕು' ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ.ಕನಗವಲ್ಲಿ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿಧಾನಸಭೆ ಚುನಾವಣೆ ಸಂಬಂಧಿಸಿದಂತೆ ಜಿಲ್ಲೆಯ ಮುದ್ರಣಕಾರರು, ಕೇಬಲ್ ಆಪರೇಟರ್‌ಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

'ಮುದ್ರಣಕಾರರು ಯಾವುದೇ ಜಾತಿ, ಧರ್ಮ ನಿಂದಿಸುವಂತಹ ಹಾಗೂ ಪ್ರಚೋದನಕಾರಿ ವಿಷಯವನ್ನೊಳಗೊಂಡ ಕರಪತ್ರ ಮುದ್ರಿಸಬಾರದು. ಅಲ್ಲದೆ ವೈಯಕ್ತಿಕ ನಿಂದನೆ ಮತ್ತು ಕೋಮು ಸಾಮರಸ್ಯ ಕದಡುವಂತಹ ವಿಷಯಗಳನ್ನು ಪ್ರಕಟಿಸಬಾರದು. ಚುನಾವಣಾ ಪ್ರಚಾರಕ್ಕೆ ಕರಪತ್ರ ಮುದ್ರಿಸುವಾಗ ಕರಪತ್ರದ ಕೆಳಭಾಗದಲ್ಲಿ ಮುದ್ರಣಾಲಯದ ಹೆಸರು, ಮೊಬೈಲ್ ಸಂಖ್ಯೆ, ಮುದ್ರಣ ಮಾಡಿದ ಕರಪತ್ರಗಳ ನಿಖರ ಸಂಖ್ಯೆಯನ್ನು ಅದರಲ್ಲಿ ನಮೂದಿಸಬೇಕು' ಎಂದರು.

'ಅಭ್ಯರ್ಥಿ ಅಥವಾ ನೇಮಕಗೊಂಡ ಚುನಾವಣಾ ಏಜೆಂಟ್‍ಗಳು ನೀಡಿದ ಕರಪತ್ರ ಸಾಮಗ್ರಿಯನ್ನು ಮಾತ್ರ ಮುದ್ರಿಸಬೇಕು. ಮುದ್ರಣಕ್ಕೆ ಕಾರ್ಯಾದೇಶ ಪಡೆಯುವ ಸಂದರ್ಭದಲ್ಲಿ ಅವರ ಹೆಸರು, ಮೊಬೈಲ್ ಸಂಖ್ಯೆ, ಇಬ್ಬರು ಸಾಕ್ಷಿಗಳ ಸಹಿಯೊಂದಿಗೆ ನಮೂನೆ-ಎಯಲ್ಲಿ ವಿವರ ಪಡೆದುಕೊಂಡು, ನಂತರ ಮುದ್ರಣ ಕಾರ್ಯಮುಗಿದ ಬಳಿಕ, ಅಪೆಂಡಿಕ್ಸ್-ಎ ಮತ್ತು ಅಪೆಂಡಿಕ್ಸ್-ಬಿ ನಲ್ಲಿ ಸೂಕ್ತ ಮಾಹಿತಿಯೊಂದಿಗೆ ಘೋಷಣಾ ಪತ್ರವನ್ನು ತಮ್ಮ ಸಂಸ್ಥೆಯ ಮೊಹರು ಹಾಗೂ ಸಹಿಯೊಂದಿಗೆ ಆಯಾ ವಿಧಾನಸಭೆ ಕ್ಷೇತ್ರದ ರಿಟರ್ನಿಂಗ್ ಅಧಿಕಾರಿಗೆ ಸಲ್ಲಿಸಬೇಕು' ಎಂದರು.

'ತಮ್ಮ ಸಂಸ್ಥೆಯ ಅಧಿಕೃತ ರಸೀದಿ, ಬಿಲ್ ಮಾತ್ರ ಬಳಸಬೇಕು. ಲೆಕ್ಕ ಪತ್ರಗಳಿಗೆ ಸಂಬಂಧಿಸಿದಂತೆ ಬಿಲ್‍ಗಳು ಹಾಗೂ ರಸೀದಿಗಳನ್ನು ಸಮರ್ಪಕವಾಗಿ ಇರಿಸಿಕೊಳ್ಳಬೇಕು. ಚುನಾವಣಾ ಅಧಿಕಾರಿಗಳು, ಚುನಾವಣಾ ವೀಕ್ಷಕರು ಯಾವುದೇ ಸಂದರ್ಭದಲ್ಲಿ ಯಾವುದೇ ಮುದ್ರಣ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲಿಸಬಹುದು. ನಿಯಮಗಳನ್ನು ಉಲ್ಲಂಘಿಸುವ ಮುದ್ರಣಕಾರರಿಗೆ 6 ತಿಂಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿರುತ್ತದೆ' ಎಂದರು.

'ಟಿ.ವಿ ಹಾಗೂ ವಿದ್ಯುನ್ಮಾನ ಮಾಧ್ಯಮಗಳು, ಕೇಬಲ್ ನೆಟ್‌ವರ್ಕ್‌, ಮೊಬೈಲ್ ನೆಟ್‌ವರ್ಕ್‌ ಮತ್ತು ಎಸ್‍ಎಂಎಸ್ ಸಂದೇಶ ಇತ್ಯಾದಿಗಳಂತಹ ಸಮೂಹ ಮಾಧ್ಯಮದ ವಿಧಾನಗಳನ್ನು ನೋಡಿಕೊಳ್ಳುವ ಸಲುವಾಗಿ ಜಿಲ್ಲಾಮಟ್ಟದಲ್ಲಿ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣಾ ಸಮಿತಿ (ಎಂಸಿಎಂಸಿ) ರಚಿಸಲಾಗಿದೆ. ಅಭ್ಯರ್ಥಿಗಳು ಹಾಗೂ ಪಕ್ಷಗಳು ಪ್ರಕಟಿಸಲು ಅಥವಾ ಪ್ರಚುರಪಡಿಸಲು ಬಯಸುವ ಜಾಹೀರಾತುಗಳು, ಸಾರ್ವಜನಿಕ ಪ್ರಕಟಣೆಗಳು, ಸಂದೇಶಗಳನ್ನು ಪ್ರಸಾರ ಮಾಡುವ ಮುನ್ನ ಜಿಲ್ಲಾಮಟ್ಟದ ಈ ಸಮಿತಿಯಿಂದ ಪ್ರಮಾಣಪತ್ರ ಪಡೆಯುವುದು ಕಡ್ಡಾಯ. ಅಲ್ಲದೆ ಪತ್ರಿಕೆ ಅಥವಾ ಟಿ.ವಿ. ಮತ್ತು ಕೇಬಲ್ ನೆಟ್‍ವರ್ಕ್, ಸಾಮಾಜಿಕ ಜಾಲತಾಣಗಳ ಜಾಹೀರಾತುಗಳಿಗೆ ನಿಯಮಾನುಸಾರ ದರ ನಿಗದಿಪಡಿಸಿ, ಸಂಬಂಧಪಟ್ಟ ಅಭ್ಯರ್ಥಿಯ ಚುನಾವಣಾ ವೆಚ್ಚಕ್ಕೆ ಸೇರ್ಪಡೆಗೊಳಿಸಲಾಗುವುದು' ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ವೆಂಕಟರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ರುದ್ರೇಶ್ ಘಾಳಿ, ಕೊಪ್ಪಳ ಚುನಾವಣಾಧಿಕಾರಿ ಸಿ.ಡಿ. ಗೀತಾ, ಕುಷ್ಟಗಿ ಚುನಾವಣಾಧಿಕಾರಿ ಪ್ರಶಾಂತ್ ಪಿ.ಬಿ., ಕನಕಗಿರಿ ಚುನಾವಣಾಧಿಕಾರಿ ಎಚ್.ವಿ. ನಾಗರಾಜ್, ಗಂಗಾವತಿ ಚುನಾವಣಾಧಿಕಾರಿ ರವಿ ತಿರ್ಲಾಪುರ, ಯಲಬುರ್ಗಾ ಚುನಾವಣಾಧಿಕಾರಿ ವಿಜಯ ಮೆಕ್ಕಳಕಿ ಇದ್ದರು.

**

ಜಾಹೀರಾತು ನೀಡಬಯಸುವ ಅಭ್ಯರ್ಥಿ ಅಥವಾ ಪಕ್ಷಗಳು ಜಾಹೀರಾತಿನ ವಿಷಯಗಳನ್ನು 2 ಸಿ.ಡಿ ಗಳಲ್ಲಿ ತುಂಬಿ ಜಿಲ್ಲಾಮಟ್ಟದ ಎಂಸಿಎಂಸಿ ಸಮಿತಿಗೆ ಸಲ್ಲಿಸಬೇಕು. -ಎಂ.ಕನಗವಲ್ಲಿ, ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ.

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT