ಚೆನ್ನೈ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಕಾವೇರಿ ನಿರ್ವಹಣಾ ಮಂಡಳಿ ರಚಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ನಟರಾದ ರಜನಿಕಾಂತ್, ಕಮಲ ಹಾಸನ್ ಸೇರಿದಂತೆ ತಮಿಳು ಚಿತ್ರರಂಗದ ಹಲವು ಗಣ್ಯರು ಭಾನುವಾರ ಪ್ರತಿಭಟನೆ ನಡೆಸಿದರು.
ರೈತರು ನೀರಿಗಾಗಿ ಪ್ರತಿಭಟನೆ ನಡೆಸುತ್ತಿರುವಾಗ ರಾಜಧಾನಿ ಚೆನ್ನೈನಲ್ಲಿ ಐಪಿಎಲ್ ಕ್ರಿಕೆಟ್ ಟೂರ್ನಿ ಆಯೋಜನೆ ಸೂಕ್ತವಲ್ಲ ಎಂದು ನಟರು ಅಭಿಪ್ರಾಯಪಟ್ಟಿದ್ದಾರೆ.
ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೂಡಲೇ ಒಪ್ಪಿಗೆ ಸೂಚಿಸುವಂತೆ ರಜನಿ ಆಗ್ರಹಿಸಿದರು.
ಕಾವೇರಿ ವಿಚಾರವಾಗಿ ಜನತೆ ಒಗ್ಗಟ್ಟು ಪ್ರದರ್ಶಿಸುವ ಉದ್ದೇಶದಿಂದ ನಗರದಲ್ಲಿ ಐಪಿಎಲ್ ಪಂದ್ಯಾವಳಿಗಳು ನಡೆಯುವ ವೇಳೆ ಕಪ್ಪು ಬಾವುಟ ಪ್ರದರ್ಶಿಸುವಂತೆ ಅಭಿಮಾನಿಗಳಿಗೆ ಮನವಿ ಮಾಡಿದರು.
ಕೆಲ ದಿನಗಳ ಹಿಂದೆ ಐಪಿಎಲ್ ಪಂದ್ಯಾವಳಿಗಳ ಆಯೋಜನೆಗೆ ನಟ ಕಮಲ್ ಹಾಸನ್ ವಿರೋಧ ವ್ಯಕ್ತಪಡಿಸಿದ್ದರು.
ಎರಡು ವರ್ಷಗಳ ಅಮಾನತು ಶಿಕ್ಷೆಯ ಬಳಿಕ ಸಿಎಸ್ಕೆ ತಂಡ ಈ ಬಾರಿ ಐಪಿಎಲ್ ಟೂರ್ನಿಯಲ್ಲಿ ಗೆಲ್ಲುವಿನ ಅಭಿಯಾನ ಆರಂಭಿಸಿದೆ. ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಒಂದು ವಿಕೆಟ್ ಜಯ ಸಾಧಿಸಿತ್ತು.