ಚೆನ್ನೈ: ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆಗ್ರಹಿಸಿ ತಮಿಳುನಾಡಿನಲ್ಲಿ ದಿನದಿಂದ ದಿನಕ್ಕೆ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಗಳನ್ನು ಬೇರೆ ಕಡೆ ಸ್ಥಳಾಂತರಿಸುವಂತೆ ಸರ್ಕಾರಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.
ಪಂದ್ಯದ ವೇಳೆ ಆಟಗಾರರು ಮತ್ತು ಅಭಿಮಾನಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ನಡೆದ ಕೆಕೆಆರ್ –ಸಿಎಸ್ಕೆ ತಂಡಗಳ ನಡುವಿನ ರೋಚಕ ಹಣಾಹಣಿಯಲ್ಲಿ ಸಿಎಸ್ಕೆ 5 ವಿಕೆಟ್ ಜಯ ಸಾಧಿಸಿತ್ತು. ಈ ಪಂದ್ಯಕ್ಕೆ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿತ್ತು.
ಪಂದ್ಯ ಮುಗಿದ ಬಳಿಕ ಕೆಕೆಆರ್ ತಂಡದ ಅಭಿಮಾನಿಯೊಬ್ಬರು ಅಂಗಳದಲ್ಲಿದ್ದ ಸಿಎಸ್ಕೆ ತಂಡದ ಆಟಗಾರರತ್ತ ‘ಶೂ’ ಎಸೆದ ಘಟನೆ ನಡೆದಿದೆ.
ಕಾವೇರಿ ವಿಚಾರಕ್ಕೆ ಸಂಬಂಧಿಸಿ ಹಲವು ದಿನಗಳಿಂದ ತಮಿಳು ಚಿತ್ರರಂಗದ ಗಣ್ಯರು ಸೇರಿದಂತೆ ರೈತರು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.