ಮಧುಗಿರಿ: ದೇಶದಲ್ಲಿಯೇ ಕಾಂಗ್ರೆಸ್ ಪಕ್ಷವನ್ನು ಜನರು ಮನೆಗೆ ಕಳುಹಿಸಿದ್ದಾರೆ. ರಾಜ್ಯದಲ್ಲಿಯೂ ಜನರು ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ಮನೆಗೆ ಕಳುಹಿಸಲು ತೀರ್ಮಾನಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದರು.
ಇಲ್ಲಿನ ಜೆಡಿಎಸ್ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಲಿನ ಭೀತಿಯಿಂದ ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಜೆಡಿಎಸ್ ವರಿಷ್ಠ ದೇವೇಗೌಡ ಹಾಗೂ ಎಚ್.ಡಿ.ಕುಮಾರ
ಸ್ವಾಮಿ ಅವರ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಶಾಸಕ ಕೆ.ಎನ್.ರಾಜಣ್ಣ ಅವರ ದೌರ್ಜನ್ಯ, ವೀರಣ್ಣನಹಳ್ಳಿ ಪ್ರಕರಣ, ಡಿಸಿಸಿ ಬ್ಯಾಂಕಿನಲ್ಲಿ ನಡೆದಿರುವ ಅವ್ಯವಹಾರಗಳ ದಾಖಲೆ ನಮ್ಮ ಬಳಿಯಿದೆ. ಸಮಯ ಬಂದಾಗ ಬಿಡುಗಡೆ ಮಾಡುತ್ತೇವೆ. ಆರ್ಯವೈಶ್ಯ ಸಮುದಾಯದವರಿಗೆ ಕಿರುಕುಳ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲವನ್ನು ಬಿಚ್ಚಿಡುವೆ. ಎಂ.ವಿ.ವೀರಭದ್ರಯ್ಯ ಅವರನ್ನು ಗೆಲ್ಲಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕೈ ಜೋಡಿಸಿ ಎಂದು ಜನರಲ್ಲಿ ಮನವಿ ಮಾಡಿದರು.
ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎಂ.ವಿ.ವೀರಭದ್ರಯ್ಯ ಮಾತನಾಡಿ, ಏ.17 ರಂದು ಕುಮಾರಪರ್ವ ಜೆಡಿಎಸ್ ಸಮಾವೇಶ ನಡೆಯಲಿದೆ. ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಪಕ್ಷಗಳ ಯುವ ಮುಖಂಡರು ಜೆಡಿಎಸ್ ಸೇರಿದರು. ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಎಂ.ಎಲ್.ಗಂಗರಾಜು, ಕಾರ್ಯಾಧ್ಯಕ್ಷ ತಿಮ್ಮರಾಯಪ್ಪ, ಪುರಸಭೆ ಸದಸ್ಯರಾದ ಎಂ.ಎಸ್.ಚಂದ್ರಶೇಖರ್, ಮಂಜುನಾಥ್, ಟಿ.ರಾಮಣ್ಣ ಇದ್ದರು.