ಮಂಗಳೂರು: ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಿತಿಮೀರಿ ವರ್ತಿಸುತ್ತಿದ್ದು, ಸಾರ್ವಜನಿಕರ ದೈನಂದಿನ ಕೆಲಸಗಳಿಗೂ ಅಡ್ಡಿಪಡಿಸುತ್ತಿದೆ ಎಂದು ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಐವನ್ ಡಿಸೋಜ ಆರೋಪಿಸಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದರಿ ಚುನಾವಣಾ ನೀತಿಸಂಹಿತೆ ಪ್ರಕಾರ ಆಯೋಗ ಮತದಾರರಿಗೆ ಆಮಿಷ ಒಡ್ಡುವುದನ್ನು ತಡೆಯಬೇಕು. ಆದರೆ, ಸಣ್ಣ ಮೊತ್ತದ ಹಣವನ್ನು ಇರಿಸಿಕೊಳ್ಳಲು ಬಿಡುತ್ತಿಲ್ಲ. ಇದರಿಂದ ಸಾಮಾಜಿಕ, ಧಾರ್ಮಿಕ, ವೈಯಕ್ತಿಕ ಕಾರ್ಯಕ್ರಮಗಳಿಗೆ ಅಡ್ಡಿಯಾಗುತ್ತಿದೆ ಎಂದು ಹೇಳಿದರು.
ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಈ ಕುರಿತು ಕಾಂಗ್ರೆಸ್ ಮನವಿ ಸಲ್ಲಿಸಲಿದೆ. ಜನರ ಪೂರ್ವನಿರ್ಧರಿತ ಕಾರ್ಯಕ್ರಮಗಳಿಗೆ ಅಡ್ಡಿಪಡಿಸದಂತೆ ಮನವಿ ಮಾಡಲಾಗುವುದು ಎಂದರು.
ಗೆಲುವನ್ನು ಮಾನದಂಡವಾಗಿ ಇರಿಸಿಕೊಂಡು ಕಾಂಗ್ರೆಸ್ ಟಿಕೆಟ್ ಹಂಚಿಕೆ ಮಾಡಲಾಗಿದೆ. ದೊಡ್ಡ ಪಕ್ಷದಲ್ಲಿ ಟಿಕೆಟ್ ಹಂಚಿಕೆ ವೇಳೆ ಬಂಡಾಯ ಸಹಜ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.