ಬೆಂಗಳೂರು: ಲೋಕಾಯುಕ್ತ ಸಂಸ್ಥೆಗೆ ಹೆಚ್ಚಿನ ಅಧಿಕಾರ ನೀಡುವುದು, ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಗಳ ನೇಮಕ ಮಾಡುವುದು ಸೇರಿದಂತೆ ಆರು ನಿರ್ಣಯಗಳನ್ನು ಜೆಡಿಎಸ್ನ ರಾಜ್ಯ ಕಾನೂನು ಘಟಕವು ಕೈಗೊಂಡಿದೆ.
ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ‘ರಾಜ್ಯಮಟ್ಟದ ವಕೀಲರ ಸಮಾವೇಶ’ದಲ್ಲಿ ಈ ನಿರ್ಣಯಗಳನ್ನು ಕೈಗೊಳ್ಳಲಾಯಿತು.
‘ಲೋಕಾಯುಕ್ತ ಕಾಯ್ದೆಯನ್ನು ಜಾರಿಗೊಳಿಸಿದ ಕೀರ್ತಿ ಜನತಾ ಪರಿವಾರಕ್ಕೆ ಸಲ್ಲುತ್ತದೆ. ಆದರೆ, ಕಾಂಗ್ರೆಸ್ ಸರ್ಕಾರವು ಭ್ರಷ್ಟಾಚಾರ ನಿಗ್ರಹ ದಳವನ್ನು ಜಾರಿಗೊಳಿಸುವ ಮೂಲಕ ಲೋಕಾಯುಕ್ತ ಸಂಸ್ಥೆಯನ್ನು ಕತ್ತು ಹಿಸುಕುವ ಕೆಲಸ ಮಾಡಿದೆ. ಲೋಕಾಯುಕ್ತರೇ ಭ್ರಷ್ಟಾಚಾರದಲ್ಲಿ ತೊಡಗಿದ್ದರು. ಜೆಡಿಎಸ್ ಅಧಿಕಾರಕ್ಕೆ ಬಂದರೆ, ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಬೇಕು.’
‘ಹೈಕೋರ್ಟ್ಗೆ ಮೂರು ವರ್ಷಗಳಿಂದ ನ್ಯಾಯಮೂರ್ತಿಗಳ ನೇಮಕಾತಿ ನಡೆದಿಲ್ಲ. 32 ನ್ಯಾಯಮೂರ್ತಿಗಳ ಹುದ್ದೆಗಳು ಖಾಲಿ ಇದ್ದು, ಇವುಗಳ ನೇಮಕಾತಿ ಮಾಡಬೇಕು. ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರು 2007ರಲ್ಲಿ ಯುವ ವಕೀಲರಿಗೆ ₹2,000 ಪ್ರೋತ್ಸಾಹ ಧನ ನೀಡಿದ್ದು, ಇದನ್ನು ₹5,000ಕ್ಕೆ ಹೆಚ್ಚಿಸಲಾಗುತ್ತದೆ. ವಕೀಲರು ಆಕಸ್ಮಿಕವಾಗಿ ಮರಣ ಹೊಂದಿದಾಗ ಅವರಿಗೆ ಪರಿಹಾರ ನೀಡಲು ವಕೀಲರ ಪರಿಷತ್ತಿನ ಕಲ್ಯಾಣ ನಿಧಿಗೆ ₹100 ಕೋಟಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು.’
‘ಕರ್ನಾಟಕ ಗೃಹ ಮಂಡಳಿ ಹಾಗೂ ಗೃಹ ನಿರ್ಮಾಣ ಪ್ರಾಧಿಕಾರಗಳಲ್ಲಿ ವಕೀಲರಿಗೆ ವಿಶೇಷ ಕೋಟಾ ನೀಡಿ, ನಿವೇಶನ ಹಂಚಿಕೆ ಮಾಡಬೇಕು. ವಕೀಲರಿಗೆ ಆರೋಗ್ಯ ವಿಮೆ ಒದಗಿಸುವುದು. ವಕೀಲರ ಸಂಘಕ್ಕೆ ನೀಡುತ್ತಿರುವ ಅನುದಾನವನ್ನು ಹೆಚ್ಚಿಸುವ ಜತೆಗೆ, ಜಿಲ್ಲಾ ಹಾಗೂ ತಾಲ್ಲೂಕು ನ್ಯಾಯಾಲಯಗಳಲ್ಲಿ ಪ್ರಾಥಮಿಕ ಚಿಕಿತ್ಸಾಲಯ ತೆರೆಯಬೇಕು. ಆಂಬುಲೆನ್ಸ್ ಸೇವೆ ಒದಗಿಸಬೇಕು.’
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ‘ಕೋರ್ಟ್ಗಳಲ್ಲಿ ನ್ಯಾಯಮೂರ್ತಿ ಹುದ್ದೆಗಳು ಖಾಲಿ ಇದ್ದರೂ ಭರ್ತಿ ಮಾಡುತ್ತಿಲ್ಲ. ಇದಕ್ಕೆ ಬೇರೆ ಬೇರೆ ರಾಜಕೀಯ ಕಾರಣಗಳಿವೆ. ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳಿಗೆ ಶಿಕ್ಷೆ ವಿಧಿಸಬೇಕಾದರೆ, ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಬೇಕು. ನ್ಯಾಯಮೂರ್ತಿಗಳ ಕೊರತೆಯಿಂದಾಗಿ ಪ್ರಕರಣಗಳ ವಿಚಾರಣೆ 2ರಿಂದ 3 ವರ್ಷಗಳು ಹಿಡಿಯುತ್ತವೆ. ಇದರಿಂದ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸಲು ಆಗುತ್ತದೆಯೇ’ ಎಂದು ಪ್ರಶ್ನಿಸಿದರು.
ಸುಪ್ರಿಂಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ನಿವೃತ್ತರಾಗುವ ವೇಳೆ, ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರವಿದೆ ಎನ್ನುತ್ತಾರೆ. ನ್ಯಾಯಮೂರ್ತಿಯಾಗಿದ್ದಾಗ ಹೇಳುವುದಿಲ್ಲ ಎಂದು ವ್ಯಂಗ್ಯವಾಡಿದರು.
ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗ ದಾರಿ ತಪ್ಪಿವೆ. ಹಳಿ ತಪ್ಪಿದ ವ್ಯವಸ್ಥೆಯನ್ನು ಜನರೇ ಸರಿಪಡಿಸಬೇಕು. ಭ್ರಷ್ಟಮುಕ್ತ ಭಾರತ ಮಾಡುತ್ತೇವೆ ಎಂದು ಬಾಯಿ ಮಾತಿನಲ್ಲಿ ಹೇಳಿದರೆ ಸಾಲದು. ಇದಕ್ಕಾಗಿ ಕೆಲ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.