ಯಲಬುರ್ಗಾ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಸಚಿವ ಬಸವರಾಜ ರಾಯರಡ್ಡಿ ಹೇಳಿದರು.ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಈಚೆಗೆ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು
ರೈತರ ಸಾಲಮನ್ನಾ, ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸೇರಿ ವಿವಿಧ ಅನುಕೂಲಗಳನ್ನು ಸರ್ಕಾರ ಕಲ್ಪಿಸಿದೆ. ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಜನಾಶೀರ್ವಾದ ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಹಾಗೂ ಬಿಜೆಪಿಯಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ. ಈ ಕಾರಣದಿಂದ ಕಾಂಗ್ರೆಸ್ಗೆ ಬೆಂಬಲ ನೀಡಬೇಕು. ಸ್ಪಷ್ಟ ಗುರಿಯಿಲ್ಲದೆ ಅಧಿಕಾರಕ್ಕೆ ಬಂದರೆ ಎನೂ ಮಾಡಲು ಸಾಧ್ಯವಿಲ್ಲ. ಕ್ಷೇತ್ರದಲ್ಲಿ ಯಾವ ಕೆಲಸ ಆಗಬೇಕೆಂಬುದನ್ನು ಅರಿತು ಹಂತ ಹಂತವಾಗಿ ಈಡೇರಿಸಿಕೊಂಡು ಬಂದಿದ್ದರಿಂದ ಜನರು ನಿರಂತರವಾಗಿ ನನ್ನನ್ನು ಆಯ್ಕೆ ಮಾಡುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಬೇಕಾಗಿದೆ. ಆಮಿಷಕ್ಕೆ ಒಳಗಾಗುವುದಿಲ್ಲ ಎಂದು ಅವರು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ ಮಾತನಾಡಿ, ಯಾವುದೇ ಅಬ್ಬರದ ಪ್ರಚಾರ ಮಾಡದೆ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಮತಯಾಚಿಸಲಾಗುತ್ತಿದೆ. ಜನರು ಬೆಂಬಲಿಸುವ ವಿಶ್ವಾಸ ಇದೆ ಎಂದು ತಿಳಿಸಿದರು.
ಗಣ್ಯರಾದ ಮಂಜುನಾಥ ಕಡೆಮನಿ, ನಾಗರಾಜ ಕೊಳಜಿ, ಹನಮಂತಗೌಡ ಚಂಡೂರ, ಶರಣಪ್ಪ ಗಾಂಜಿ, ಸುಧೀರ ಕೊರ್ಲಳ್ಳಿ, ಬಸವರಾಜ ಈಳೀಗೇರ ಅವರು ಈ ಸಂದರ್ಭದಲ್ಲಿ ಇದ್ದರು.