ದಾವಣಗೆರೆ: ಜಗಳೂರು ಕ್ಷೇತ್ರದಿಂದ ಶಾಸಕ ರಾಜೇಶ್ ಅವರಿಗೆ ಕಾಂಗ್ರೆಸ್ ಬಿ ಫಾರಂ ನೀಡಿದ್ದರಿಂದ ಮನನೊಂದು ಖಿನ್ನತೆಗೆ ಒಳಗಾಗಿರುವ ಎ.ಎಲ್.ಪುಷ್ಪಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈಚೆಗೆ ಬಿಡುಗಡೆಯಾದ ಕಾಂಗ್ರೆಸ್ ಪಟ್ಟಿಯಲ್ಲಿ ಜಗಳೂರು ಕ್ಷೇತ್ರದಿಂದ ಪುಷ್ಪಾ ಅವರಿಗೆ ಟಿಕೆಟ್ ನೀಡಲಾಗಿತ್ತು.
ಆದರೆ, ಶಾಸಕ ರಾಜೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಮೇಲೆ ಒತ್ತಡ ಹಾಕುವ ಮೂಲಕ ಬಿ ಫಾರಂ ಪಡೆಯುವಲ್ಲಿ ಯಶಸ್ವಿಯಾಗಿದ್ದರು.
ಟಿಕೆಟ್ ಸಿಕ್ಕರೂ ಬಿ ಫಾರಂ ನೀಡಲಿಲ್ಲ ಎಂಬ ಕಾರಣಕ್ಕೆ ಪುಷ್ಪಾ ಬಹಿರಂಗವಾಗಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ದಲಿತ ಮಹಿಳೆಗೆ ಟಿಕೆಟ್ ವಂಚಿಸಿ ಅನ್ಯಾಯ ಎಸಗಲಾಗಿದೆ ಎಂದು ಕಣ್ಣೀರಿಟ್ಟಿದ್ದರು.
ಈ ಎಲ್ಲ ಬೆಳವಣಿಗೆಗಳಿಂದ ಬೇಸತ್ತು ಅವರು ಖಿನ್ನತೆಗೊಳಗಾಗಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.