ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(ಸಿಜೆಐ) ದೀಪಕ್ ಮಿಶ್ರಾ ವಿರುದ್ಧದ ವಾಗ್ದಂಡನೆ ನೋಟಿಸ್ ತಿರಸ್ಕಾರಗೊಂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದರು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ಹಿರಿಯ ವಕೀಲ ಕಪಿಲ್ ಸಿಬಲ್ ಹಿಂಪಡೆದಿದ್ದಾರೆ.
ಕಾಂಗ್ರೆಸ್ನ ಇಬ್ಬರು ಸಂಸದರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಕೆ.ಸಿಕ್ರಿ ನೇತೃತ್ವದ ಐವರು ಸದಸ್ಯರ ನ್ಯಾಯಪೀಠ ಮಂಗಳವಾರ 45 ನಿಮಿಷ ವಿಚಾರಣೆ ನಡೆಸಿ, ಅರ್ಜಿ ವಜಾಗೊಳಿಸಿರುವುದಾಗಿ ತಿಳಿಸಿತು.
ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಅವರು ಸಿಜೆಐ ವಿರುದ್ಧದ ವಾಗ್ದಂಡನೆ ನೋಟಿಸ್ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ಪಂಜಾಬ್ನ ರಾಜ್ಯಸಭಾ ಸಂಸದ ಪ್ರತಾಪ್ ಸಿಂಗ್ ಬಜ್ವಾ ಹಾಗೂ ಗುಜರಾತ್ ರಾಜ್ಯಸಭಾ ಸಂಸದ ಅಮೀ ಯಾಜ್ಞಿಕ್ ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
64 ಜನರು ಸಹಿ ಹಾಕಿದ್ದ ನೋಟಿಸ್ ಸಂಬಂಧ ತನಿಖಾ ಸಮಿತಿ ರಚಿಸುವುದು ಸಭಾಪತಿಗಳ ‘ಕರ್ತವ್ಯವಾಗಿತ್ತು’, ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ವಾಗ್ದಂಡನೆ ನೋಟಿಸ್ ತಿರಸ್ಕರಿಸಿ ನೀಡಿದ ಆದೇಶ ರದ್ದುಪಡಿಸಬೇಕೆಂದು ಕಾಂಗ್ರೆಸ್ ಸಂಸದರು ಅರ್ಜಿಯಲ್ಲಿ ಉಲ್ಲೇಖಿಸಿದ್ದರು.