ಪಟ್ನಾ: ಎನ್ಡಿಎ ತೆಕ್ಕೆಯಲ್ಲಿರುವ ಜೆಡಿಯು ನಾಯಕ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಯುಪಿಎ ಸೇರುವಂತೆ ಕಾಂಗ್ರೆಸ್ ಆಹ್ವಾನ ನೀಡಿದೆ.
ಬಿಹಾರ ಕಾಂಗ್ರೆಸ್ ಉಸ್ತುವಾರಿಯಾಗಿ ಹೊಸದಾಗಿ ನೇಮಕವಾದ ಗುಜರಾತ್ನ ಶಕ್ತಿ ಸಿಂಗ್ ಗೋಹಿಲ್ ಮಂಗಳವಾರ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ನಿತೀಶ್ ಕುಮಾರ್ ಅವರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.
‘ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಜೆಡಿಯು ಮುಂದಿಟ್ಟ ಬೇಡಿಕೆ ನ್ಯಾಯಸಮ್ಮತವಾಗಿದೆ. ಈ ಬೇಡಿಕೆಯನ್ನು ಕಾಂಗ್ರೆಸ್ ಬೆಂಬಲಿಸುತ್ತದೆ’ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಬೆಂಬಲವನ್ನು ಸ್ವಾಗತಿಸಿರುವ ಜೆಡಿಯು, ಯುಪಿಎ ಕೇಂದ್ರದಲ್ಲಿ 10 ವರ್ಷ ಅಧಿಕಾರದಲ್ಲಿದ್ದಾಗ ಈ ಬೇಡಿಕೆಯನ್ನು ಏಕೆ ಈಡೇರಿಸಲಿಲ್ಲ ಎಂದು ಪ್ರಶ್ನಿಸಿದೆ.
‘ಬಿಹಾರಕ್ಕೆ ವಿಶೇಷ ಸ್ಥಾನಮಾನ ಮತ್ತು ವಿಶೇಷ ಅನುದಾನ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಭರವಸೆ ಇನ್ನೂ ನೆರವೇರಿಲ್ಲ. ನಿತೀಶ್ ನೇತೃತ್ವದ ಜೆಡಿಯು, ಎನ್ಡಿಎದಲ್ಲಿ ಮುಂದುವರಿಯುವುದರಲ್ಲಿ ಅರ್ಥವಿಲ್ಲ’ ಎಂದು ಗೋಹಿಲ್ ಅಭಿಪ್ರಾಯಪಟ್ಟಿದ್ದಾರೆ.
ಒಂದು ವೇಳೆ ನಿತೀಶ್ ಕುಮಾರ್ ಯುಪಿಎ ಸೇರ್ಪಡೆಯಾಗುವುದಾದರೆ ಅವರನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸುವುದಾಗಿ ಹೇಳಿದ್ದಾರೆ.