ಬೆಂಗಳೂರು: ರಾಜ್ಯದ ಎಲ್ಲ ಕಾರ್ಖಾನೆ ಮತ್ತು ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಅರ್ಹ ಮತದಾರ ಕಾರ್ಮಿಕರಿಗೆ ಇದೇ 12ರಂದು ವೇತನ ಸಹಿತ ರಜೆ ನೀಡಬೇಕು ಎಂದು ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಸೂಚಿಸಿದೆ.
ಕಾರ್ಮಿಕರಿಗೆ ಮತ ಚಲಾಯಿಸಲು ಅಂದು ಬೆಳಿಗ್ಗೆ 6 ರಿಂದ ಮೇ 13ರ ಬೆಳಿಗ್ಗೆ 6 ಗಂಟೆಯವರೆಗೆ ವೇತನ ಸಹಿತ ರಜೆ ಮಂಜೂರು ಮಾಡುವುದು ಆಡಳಿತ ವರ್ಗದ ಕರ್ತವ್ಯ. ನೋಂದಾಯಿತ ಕಾರ್ಖಾನೆಗಳ ಆಡಳಿತ ಮಂಡಳಿಗಳು ಈ ಕ್ರಮ ಕೈಗೊಳ್ಳಬೇಕು ಎಂದು ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಒಂದು ವೇಳೆ ಕಾರ್ಖಾನೆ ನಡೆಯುವುದು ಅಥವಾ ಉತ್ಪಾದನೆ ಚಟುವಟಿಕೆಯಲ್ಲಿ ತೊಡಗುವುದು ಅನಿವಾರ್ಯವಾದರೆ ಪರ್ಯಾಯ ವ್ಯವಸ್ಥೆ ರೂಪಿಸಿಕೊಳ್ಳಬೇಕು. ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಾಕಷ್ಟು ಕಾಲಾವಕಾಶ ಮಾಡಿಕೊಡಬೇಕು’ ಎಂದು ಸೂಚಿಸಿದ್ದಾರೆ.
‘ಎಲ್ಲಾ ಪಾಳಿಗಳಲ್ಲಿ ಕಾರ್ಯ ನಿರ್ವಹಿಸುವ ನೌಕರರು ಮತ್ತು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡುವ ಬಗ್ಗೆ ಕಾರ್ಮಿಕ ಇಲಾಖೆ ಆಯುಕ್ತರು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಈಗಾಗಲೇ ಆದೇಶಿಸಿದ್ದಾರೆ’ ಎಂದೂ ಪ್ರಕಟಣೆ ವಿವರಿಸಿದೆ.