ಬೆಂಗಳೂರು: ‘ಹೆಬ್ಬಾಳ ಶಾಸಕ ವೈ.ಎ. ನಾರಾಯಣಸ್ವಾಮಿ ಅವರ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ’ ಎಂದು ಶಿವಕುಮಾರ್ ಎಂಬುವರು ಸಂಜಯನಗರ ಠಾಣೆಗೆ ದೂರು ನೀಡಿದ್ದಾರೆ.
‘ಜೆಡಿಎಸ್ ಕಾರ್ಯಕರ್ತ ಎಂದು ಹೇಳಿಕೊಂಡಿರುವ ಶಿವಕುಮಾರ್ ದೂರು ಕೊಟ್ಟಿದ್ದಾರೆ. ಅದರನ್ವಯ ಎಫ್ಐಆರ್ ದಾಖಲಿಸಿಕೊಂಡಿದ್ದೇವೆ’ ಎಂದು ಪೊಲೀಸರು ತಿಳಿಸಿದರು.
‘ಶಾಸಕರ ಮನೆ ಬಳಿ ಮತದಾರರಿಗೆ ಹಣ ಹಂಚುತ್ತಿದ್ದ ಬಗ್ಗೆ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ವಿಡಿಯೊ ಮಾಡುತ್ತಿದ್ದೆ. ಅದೇ ವೇಳೆ ನನ್ನ ಮೇಲೆ ಹಲ್ಲೆ ನಡೆಸಿದ ಬೆಂಬಲಿಗರು, ಮೊಬೈಲ್ ಕಸಿದುಕೊಂಡಿದ್ದಾರೆ’ ಎಂದು ದೂರಿನಲ್ಲಿ ಶಿವಕುಮಾರ್ ತಿಳಿಸಿದ್ದಾರೆ.
‘ಹಲ್ಲೆಯಿಂದಾಗಿ ಗಾಯಗಳಾಗಿವೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದೇನೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ’ ಎಂದು ಒತ್ತಾಯಿಸಿದ್ದಾರೆ.
ಪೊಲೀಸರು, ‘ಹಲ್ಲೆ ಮಾಡಿದವರ ಹೆಸರುಗಳನ್ನು ಶಿವಕುಮಾರ್ ತಿಳಿಸಿಲ್ಲ. ಘಟನೆ ಬಗ್ಗೆ ಕೆಲವು ಗೊಂದಲಗಳಿವೆ. ಅವುಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ’ ಎಂದರು.