ದೊಡ್ಡಬಳ್ಳಾಪುರ: ‘ಐದು ವರ್ಷಗಳ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕವನ್ನು ಅಭಿವೃದ್ಧಿಯಲ್ಲಿ ಹಿಂದಕ್ಕೆ ತಳ್ಳಲಾಗಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಪ್ರಬಲ ಸರ್ಕಾರ ಅಧಿಕಾರದಲ್ಲಿದೆ. ಅಂತಹುದೇ ಆಡಳಿತ ರಾಜ್ಯಕ್ಕೂ ಬೇಕಿದೆ’ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದರು.
ನಗರದಲ್ಲಿ ಗುರುವಾರ ಬಿಜೆಪಿ ಅಭ್ಯರ್ಥಿ ಜೆ.ನರಸಿಂಹಸ್ವಾಮಿ ಅವರ ಪರವಾಗಿ ನಡೆದ ರೋಡ್ ಷೋನಲ್ಲಿ ಮತಯಾಚನೆ ಮಾಡಿ ಮಾತನಾಡಿದರು.
‘ಮೋದಿ ನೇತೃತ್ವದ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಸದೃಢ ಸರ್ಕಾರ ತರುವ ನಿಟ್ಟಿನಲ್ಲಿ ಬಿ.ಎಸ್.ಯಡಿಯೂರಪ್ಪ ಅವರಂತಹ ಪ್ರಬಲ ನಾಯಕನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ’ ಎಂದು ಹೇಳಿದರು.
‘ಕರ್ನಾಟಕ ರಾಜ್ಯದಲ್ಲಿಯೂ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಅಭಿವೃದ್ದಿಗೆ ಮತದಾರರು ಸಹಕರಿಸಬೇಕು’ ಎಂದು ಮನವಿ ಮಾಡಿದರು. ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷ ಕೆ.ಎಂ. ಹನುಮಂತರಾಯಪ್ಪ ಮಾತನಾಡಿ, ರಾಜ್ಯ ಸರ್ಕಾರ ರೈತರ ಹಾಗೂ ನೇಕಾರರ ಹಿತ ಮರೆತಿದೆ. ಅವರ ಹಿತರಕ್ಷಣೆಗಾಗಿ ಬಿಜೆಪಿ ಬೆಂಬಲಿಸಬೇಕಿದೆ ಎಂದರು.
ಜೆ.ನರಸಿಂಹಸ್ವಾಮಿ ಮಾತನಾಡಿ, ‘ತಾಲ್ಲೂಕಿನ ಪ್ರತಿ ಹಳ್ಳಿಯಲ್ಲೂ ಅಕ್ರಮ ಮದ್ಯ ಮಾರಾಟದ ಹಾವಳಿ ಮಿತಿ ಮೀರಿದೆ’ ಎಂದರು.
‘ಅಧಿಕಾರಿಗಳ ಮೂಲಕ ಬೇರೆ ರಾಜಕೀಯ ಪಕ್ಷಗಳ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ. ಬೇರೆ ರಾಜ್ಯಗಳ ಗುತ್ತಿಗೆದಾರರನ್ನು ಕರೆತಂದು ಕಾಮಗಾರಿಗಳನ್ನು ನಡೆಸಿ ಅವ್ಯವಹಾರ ಮಾಡಿದ್ದಾರೆ’ ಎಂದು ಅವರು ಆರೋಪಿಸಿದರು.
‘ಜಕ್ಕಲಮೊಡುಗು ಕಾಮಗಾರಿಯನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಗಿಸಲಾಗಿತ್ತು. ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದರಿಂದ ಉದ್ಘಾಟನೆ ಮಾಡಲು ಆಗಲಿಲ್ಲ ಎಂದರು.
ಜಿಲ್ಲಾ ಅಧ್ಯಕ್ಷ ಬಿ.ರಾಜಣ್ಣ, ಜಿಲ್ಲಾ ವಕ್ತಾರ ಅಮರನಾಥ್, ತಾಲ್ಲೂಕು ಅಧ್ಯಕ್ಷ ಸಿ.ನಾರಾಯಣಸ್ವಾಮಿ, ನಗರ ಅಧ್ಯಕ್ಷ ಕೆ.ಎಚ್.ರಂಗರಾಜು, ಜಿಲ್ಲಾ ಚುನಾವಣಾ ಉಸ್ತುವಾರಿ ಬಿ.ಸಿ.ನಾರಾಯಾಣಸ್ವಾಮಿ ಉಪಸ್ಥಿತರಿದ್ದರು.