ಮೈಸೂರು: ‘ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯನ್ನು ಕ್ಷುಲ್ಲಕ ಕಾರಣಕ್ಕೆ ಮುಂದೂಡಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವರುಣಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ನಮ್ಮ ಪಕ್ಷದ ಅಭ್ಯರ್ಥಿ ಆ ಕ್ಷೇತ್ರದ ಮತದಾರರ ಮೇಲೆ ಯಾವುದೇ ಪ್ರಭಾವ ಬೀರಿಲ್ಲ. ಭ್ರಷ್ಟಾಚಾರ ನಡೆದಿಲ್ಲ. ಚುನಾವಣಾ ಆಯೋಗದ ಬಳಿ ಏನಾದರೂ ಪುರಾವೆ ಇದೆಯೇ’ ಎಂದು ಪ್ರಶ್ನಿಸಿದರು.
‘ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುವುದಿಲ್ಲ. ಕಾಂಗ್ರೆಸ್ ಪಕ್ಷ ಬಹುಮತ ಪಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಭಾಷಣ ರಾಜ್ಯದ ಮತದಾರರ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಯಡಿಯೂರಪ್ಪ ಮಾನಸಿಕವಾಗಿ ಗೊಂದಲಕ್ಕೆ ಒಳಗಾಗಿದ್ದಾರೆ’ ಎಂದರು.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮನೆಯೊಂದರಲ್ಲಿ ಇತ್ತೀಚೆಗೆ 8 ಸಾವಿರಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿ, ಗುರುತಿನ ಚೀಟಿಗಾಗಿ ಸಲ್ಲಿಸುವ ಸಾವಿರಾರು ಅರ್ಜಿಯ ನಮೂನೆಗಳು ಸಿಕ್ಕಿದ್ದರಿಂದ ಆಯೋಗ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಿದೆ.